ಉಡುಪಿ : ನೂತನ ವರ್ಷವನ್ನು ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆ ಯೊಂದಿಗೆ ಸ್ವಾಗತಿಸಿದರು. ಶನಿವಾರ ಸಂಜೆಯ ವೇಳೆ ಇಗರ್ಜಿಗಳಿಗೆ ತೆರಳಿದ ಕ್ರೈಸ್ತ ಬಾಂಧವರು ಕಳೆದ ವರ್ಷ ಸರ್ವ ರೀತಿಯಲ್ಲಿ ತಮ್ಮನ್ನುಕಾಪಾಡಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದರು. ನೂತನ ವರ್ಷ ಪ್ರತಿಯೊಬ್ಬರಿಗೂ ಸಂತೋಷ ತರಲಿ ಎಂದು ಬೇಡಿದರು.
ಉಡುಪಿ ಬಿಷಪ್ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಅಧಿಕೃತ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಶನಿವಾರ ರಾತ್ರಿ ಪವಿತ್ರ ಬಲಿಪೂಜೆ ಅರ್ಪಿಸಿದರು. ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಸದಾ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದರು. ವಿಶ್ವ ಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನವನ್ನು ಮಾಡುವಂತೆ ಕರೆ ನೀಡಿದರು.
ಪವಿತ್ರ ಬಲಿ ಪೂಜೆಗೆ ಮುಂಚಿತವಾಗಿ ಕಳೆದು ಹೋಗಲಿರುವ 2022ನೇ ವರ್ಷದಲ್ಲಿ ದೇವರು ಮಾಡಿದ ಎಲ್ಲಾ ರೀತಿಯ ಉತ್ತಮ ಕೆಲಸಗಳಿಗಾಗಿ ದೇವರಿಗೆ ಧನ್ಯವಾದ ಅರ್ಪಿಸಿ ಪರಮ ಪ್ರಸಾದದ ವಿಶೇಷ ಆರಾಧನೆಯನ್ನು ನಡೆಸಲಾಯಿತು. 2023 ರಲ್ಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಲಾಯಿತು.
ಮಿಲಾಗ್ರಿಸ್ ಕ್ಯಾಥೆಡ್ರಲ್ನ ರೆಕ್ಟರ್ ವಂ| ವಲೇರಿಯನ್ ಮೆಂಡೋನ್ಸಾ, ಸಹಾಯಕ ಧರ್ಮಗುರು ವಂ|ಜೋಯ್ ಅಂದ್ರಾದೆ, ಅತಿಥಿ ಧರ್ಮಗುರುಗಳು ಉಪಸ್ಥಿತರಿದ್ದರು. ಶನಿವಾರ ನಿಧನರಾದ ನಿವೃತ್ತ ಪೋಪ್ ಹದಿನಾರನೇ ಬೆನೆಡಿಕ್ಟ್ ಅವರ ಆತ್ಮಕ್ಕೆ ಶಾಂತಿ ಕೋರಿ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಲಾಯಿತು.