ಅವರು ಇಂದು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಉಡುಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ರಚನೆಯ ರಾಮಾಯಣವು ಎಲ್ಲರಿಗೂ ಅರ್ಥವಾಗುವ ಸರಳ ಭಾಷೆಯಿಂದ ಕೂಡಿದ್ದು, ವಿವಿಧ ಭಾಷೆಗಳಿಗೆ ಭಾಷಾಂತರವಾಗಿ, ಧಾರಾವಾಹಿ,ಚಲನಚಿತ್ರಗಳ ಮೂಲಕ ಪ್ರತಿಯೊಬ್ಬರ ಮನೆ ಮನಗಳನ್ನು ಮುಟ್ಟಿದೆ. ರಾಮಾಯಣದಲ್ಲಿನ ಮೌಲ್ಯಗಳು,ತತ್ವಗಳು ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. ಸತತ ಪರಿಶ್ರಮದಿಂದ ಯಾವುದೇ ವ್ಯಕ್ತಿ ಮಹಾನ್ ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಸಾಕ್ಷಿಯಾಗಿದ್ದಾರೆ.
ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಅತ್ಯಂತ ಹಿಂದುಳಿದ ವರ್ಗದ ವ್ಯಕ್ತಿ ಜ್ಞಾನ ಪಡೆಯುವ ಮೂಲಕ ಆದಿಕವಿ ವಾಲ್ಮೀಕಿಯಾಗಿದ್ದಾರೆ, ಹಿಂದುಳಿದ ವರ್ಗದ ಜನತೆ ತಮ್ಮಲ್ಲಿನ ಕೀಳಿರಿಮೆ ತೊರೆದು, ವಿದ್ಯಾಭ್ಯಾಸ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಈ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾದುದು ಎಂದರು.
ಮಹರ್ಷಿ ವಾಲ್ಮೀಕಿಯವರ ವ್ಯಕ್ತಿತ್ವ ಮತ್ತು ಜೀವನದ ಬಗ್ಗೆ ಉಪನ್ಯಾಸ ನೀಡಿದ ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿ ದಿನಕರ ಕೆಂಜೂರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಚಿಂತಕ , ತತ್ವಜ್ಞಾನಿ, ಶಿಕ್ಷಣ ಪ್ರೇಮಿಯಾಗಿದ್ದರು,ರಾಮಾಯಣವನ್ನು ಜನಸಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ರಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು. ಸಮಗ್ರ ಗಿರಿಜನ ಅಭಿವೃದ್ದಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ದೂದ್ಪೀರ್ ಸ್ವಾಗತಿಸಿದರು, ವಿಶ್ವನಾಥ್ ವಂದಿಸಿದರು.