ಮಹರ್ಷಿ ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಬೇಡನಾಗಿದ್ದ ವ್ಯಕ್ತಿ ತನ್ನ ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿ ಯಾಗಿ ರೂಪುಗೊಂಡಿದ್ದು, ವಾಲ್ಮೀಕಿ ಅವರ ಈ ಸಾಧನೆ ಎಲ್ಲರಿಗೂ ಪ್ರೇರಣೆಯಾಗ ಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.

ಅವರು ಇಂದು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಉಡುಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ರಚನೆಯ ರಾಮಾಯಣವು ಎಲ್ಲರಿಗೂ ಅರ್ಥವಾಗುವ ಸರಳ ಭಾಷೆಯಿಂದ ಕೂಡಿದ್ದು, ವಿವಿಧ ಭಾಷೆಗಳಿಗೆ ಭಾಷಾಂತರವಾಗಿ, ಧಾರಾವಾಹಿ,ಚಲನಚಿತ್ರಗಳ ಮೂಲಕ ಪ್ರತಿಯೊಬ್ಬರ ಮನೆ ಮನಗಳನ್ನು ಮುಟ್ಟಿದೆ. ರಾಮಾಯಣದಲ್ಲಿನ ಮೌಲ್ಯಗಳು,ತತ್ವಗಳು ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. ಸತತ ಪರಿಶ್ರಮದಿಂದ ಯಾವುದೇ ವ್ಯಕ್ತಿ ಮಹಾನ್ ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಸಾಕ್ಷಿಯಾಗಿದ್ದಾರೆ. 
 
ಉಡುಪಿ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಕಾರ್ಯಕ್ರಮ ಆರಂಭವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಪರಿಶಿಷ್ಟ ಪಂಗಡದ ಅಭಿವೃಧ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳ ಪ್ರಯೋಜನವನ್ನು ಪ.ಪಂಗಡದ ಜನತೆ ಪಡೆಯಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಅತ್ಯಂತ ಹಿಂದುಳಿದ ವರ್ಗದ ವ್ಯಕ್ತಿ ಜ್ಞಾನ ಪಡೆಯುವ ಮೂಲಕ ಆದಿಕವಿ ವಾಲ್ಮೀಕಿಯಾಗಿದ್ದಾರೆ, ಹಿಂದುಳಿದ ವರ್ಗದ ಜನತೆ ತಮ್ಮಲ್ಲಿನ ಕೀಳಿರಿಮೆ ತೊರೆದು, ವಿದ್ಯಾಭ್ಯಾಸ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಈ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾದುದು ಎಂದರು.

ಮಹರ್ಷಿ ವಾಲ್ಮೀಕಿಯವರ ವ್ಯಕ್ತಿತ್ವ ಮತ್ತು ಜೀವನದ ಬಗ್ಗೆ ಉಪನ್ಯಾಸ ನೀಡಿದ ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿ ದಿನಕರ ಕೆಂಜೂರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಚಿಂತಕ , ತತ್ವಜ್ಞಾನಿ, ಶಿಕ್ಷಣ ಪ್ರೇಮಿಯಾಗಿದ್ದರು,ರಾಮಾಯಣವನ್ನು ಜನಸಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ರಚಿಸಿದ್ದಾರೆ.
ಅದರಲ್ಲಿನ ಪ್ರಕೃತಿ ಸೌಂದರ್ಯ, ಆದರ್ಶ ವ್ಯಕ್ತಿಯ ಚಿತ್ರಣ, ಕೌಟುಂಬಿಕ ಮೌಲ್ಯಗಳು, ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳು ಎಲ್ಲಾ ಕಾಲದಲ್ಲೂ ಪ್ರಸ್ತುತವಾಗಿವೆ, ವ್ಯಕ್ತಿ ತನ್ನಲ್ಲಿನ ನಕಾರಾತ್ಮಕ ಭಾವನೆಗಳನ್ನು ತೊಡೆದು, ಆತ್ಮ ವಿಶ್ವಾಸದಿಂದ ಮುನ್ನಡೆದರೆ ಉನ್ನತ ಸಾಧನೆಗಳನ್ನು ಮಾಡಲು ಸಾಧ್ಯ ಎಂಬುದಕ್ಕೆ ವಾಲ್ಮೀಕಿ ಅವರ ಜೀವನ ಚರಿತ್ರೆ ಸಾಕ್ಷಿಯಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು. ಸಮಗ್ರ ಗಿರಿಜನ ಅಭಿವೃದ್ದಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್ ಸ್ವಾಗತಿಸಿದರು, ವಿಶ್ವನಾಥ್ ವಂದಿಸಿದರು. 
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರಾದ ಪ್ರತಿಭಾ ನಾಯ್ಕ್, ಕಾವ್ಯಶ್ರೀ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶೀನ ನಾಯ್ಕ, ದೋಗು ಕೊರಗ, ಗುಲಾಬಿ ಗೌಡ್ತಿ ಅವರನ್ನು ಸನ್ಮಾನಿಸಲಾಯಿತು.
 
 
 
 
 
 
 
 
 
 
 

Leave a Reply