‘ಪತ್ತನಾಜೆ’ ಪೂರ್ವೋತ್ತರ : ‘ಪೃಥ್ವೀ ಗಂಧವತೀ’~ಕೆ.ಎಲ್ .ಕುಂಡಂತಾಯ.

( ಮೇ 24 : ಪತ್ತನಾಜೆ) ‘ಪತ್ತನಾಜೆ’ ಎಂದರೆ ಆಟ. ಕೋಲ‌, ಬಲಿ‌, ಅಂಕ, ಆಯನಗಳಿಗೆ ಅಲ್ಪವಿರಾಮ ಎಂಬ ನಂಬಿಕೆ ಸರಿಯಾದುದೇ . ಆದರೆ ಸಾಕು ಸಂಭ್ರಮ – ಗೌಜಿ ಗದ್ದಲ , ಉತ್ಸವಗಳ ಗುಂಗಿನಿಂದ ಹೊರಗೆ ಬಾ…..ತೊಡಗು… ಕೃಷಿಗೆ ಎಂಬ ಎಚ್ಚರಿಕೆಯೂ ‘ಪತ್ತನಾಜೆ’ಯ ನೆನಪಿನಲ್ಲಿದೆ .

ಆಚರಣೆಗಳು ಇಲ್ಲದಿದ್ದರೂ ಜೀವನಾಧಾರವಾದ ಬೇಸಾಯಕ್ಕೆ ಪ್ರವೃತ್ತನಾಗು ಎಂಬ ನಿರ್ದೇಶನ ಪತ್ತನಾಜೆ ಒದಗಿ ಬರುವ ಸಂದರ್ಭದಲ್ಲಿ ನಿಚ್ಚಳ . ತುಳುವರ ಬೇಶ ತಿಂಗಳ ಹತ್ತನೇ ದಿನವೇ ಪತ್ತನಾಜೆ .ಸೌರ ಪದ್ಧತಿಯ ಎರಡನೇ ತಿಂಗಳು ವೃಷಭ .‌ವೃಷಭ ಎಂದರೆ ಬೇಶ .ಹತ್ತನೇ ದಿನವನ್ನು ತಿಂಗಳು ಸಾಗುವ ಹತ್ತನೇ ಹೆಜ್ಜೆ (ಅಜೆ)ಎಂದು ಗ್ರಹಿಸಿ ‘ಪತ್ತನಾಜೆ”ಎಂದಿರ ಬಹುದು.

‘ಬೇಶ’ ತಿಂಗಳು ತನ್ನ ವಿಶೇಷಗಳಿಂದ , ಪುರಾತನ ಒಪ್ಪಿಗೆಗಳೊಂದಿಗೆ ಬಹಳ ಮುಖ್ಯ ತಿಂಗಳು .’ಬೇಶದ ತನು – ಬೇಶದ ತಂಬಿಲ‌’ ತುಳುವರಿಗೆ ಆಚರಣೆಗಳ ಪರ್ವಕಾಲ .’ಬೆನ್ನಿ’ ಅಥವಾ ‘ಬೇಸಾಯ’ಕ್ಕೆ ತೊಡಗುವ ಮುನ್ನ ತಮ್ಮ ಮೂಲಸ್ಥಾನಗಳಿಗೆ ಹೋಗಿ ಭೂಮಿ ಪುತ್ರನಾದ ಈ ನೆಲದ ಸರ್ವಾಧಿಕಾರಿ ‘ನಾಗನಿಗೆ’ ; “ತನು ಮಯಿಪಾದ್ ತಂಬಿಲಕಟ್ಟಾದ್” , ದೈವಗಳಿಗೆ ಭೋಗ ಕೊಟ್ಟು ಬಂದು ಬೇಸಾಯಕ್ಕೆ ಆರಂಭಿಸುವ ಸಂಪ್ರದಾಯ ತುಳುವರದ್ದಾಗಿತ್ತು.

ಈಗ ಕಾಲ ಬದಲಾಗಿದೆ , ಮನಸ್ಸು ಬಂದಾಗ ‘ಮೂಲತಾನ’ಗಳಿಗೆ ಹೋಗಿ ‘ನಾಗ – ದೈವ’ ಗಳಿಗೆ ಸೇವೆ ಸಲ್ಲಿಸುವ ಆರ್ಥಿಕ ಸಬಲತೆ ಇದೆ – ಸ್ವಂತ ವಾಹನ ಸೌಲಭ್ಯಗಳಿವೆ. ಬದಲಾಗುತ್ತಿ ರುವ ಕಾಲ – ಸಂದರ್ಭ – ಮನೋಧರ್ಮಗಳಿಂದಾಗಿ ತಮ್ಮ ಮೂಲಸ್ಥಾನ ತೊರೆದು ಬದುಕು ಕಟ್ಟುವ ಉದ್ದೇಶದಿಂದ ಬೇಸಾಯದ ಅವಕಾಶ ಬಯಸಿ ದೂರದ ಪ್ರದೇಶಗಳಿಗೆ ಹೋಗಿ ಬೇಸಾಯದ ಜೀವನ ಆರಂಭಿಸಿದ್ದ ಮಾನವನ ಚರ್ಯೆಗೆ ಅಥವಾ ಮನೋಧರ್ಮಕ್ಕೆ ಶತಮಾನ ಗಳೇ ಸಂದು ಹೋದುವು.

ಈ ಪರಿಸ್ಥಿತಿಯಲ್ಲೂ ಬೇಸಾಯಕ್ಕೆ ಆರಂಭಿಸುವ ಮುನ್ನ ಮೂಲಕ್ಕೆ ಹೋಗುವುದು ಶಿಷ್ಟಾಚಾರ ವಾಯಿತು . ವರ್ಷಕ್ಕೆ ಒಂದೆರಡು ಬಾರಿಯಾದರೂ ಮೂಲಕ್ಕೆ ಸಂದರ್ಶನ ನೀಡುವ ಆಸ್ತಿಕರು ಬೇಶದಲ್ಲಿ ಖಂಡಿತ ಹೋಗುತ್ತಾರೆ . ಆ ದಿನ ಪತ್ತನಾಜೆಯ ಆಸುಪಾಸಿನಲ್ಲಿರುತ್ತದೆ .

ಮಕರ – ಪುಯಿಂತೆಲ್ ತಿಂಗಳ ಕೊನೆಯ ಮೂರು ದಿನಗಳ “ಕೆಡ್ಡಸ” ಆಚರಣೆಯಲ್ಲಿ ಭೂಮಿದೇವಿ ಪುಷ್ಪವತಿಯಾದಳು ಎಂಬ ನಂಬಿಕೆ ನಮ್ಮದು .ಅಂದರೆ ನಿಸರ್ಗದಲ್ಲಿ ಅದ್ಭುತ ಬದಲಾವಣೆ ಯಾಗುವ ಕಾಲವದು .‌ಹೆಣ್ಣು ಮಗಳು ‘ಪುಷ್ಪವತಿ’ ಯಾದಳೆಂದರೆ ‘ಫಲವತಿ’ಯಾಗಲು ಸಿದ್ಧ ಳಾದಳು ಎಂದಲ್ಲವೇ ಅರ್ಥ . ಪುಯಿಂತೆಲ್ – ಮಕರ ತಿಂಗಳಲ್ಲೆ ಪ್ರಕೃತಿ ಬದಲಾಗಲು ತೊಡಗುತ್ತದೆ , ಕೃಷಿಯ ಸಣ್ಣ ಪುಟ್ಟ ತಯಾರಿ ನಡೆಯಲಾರಂಭವಾಗುತ್ತದೆ .

‘ಮಾಯಿ – ಕುಂಭ’ ತಿಂಗಳು ಮುಗಿಯುತ್ತಿರುವಂತೆ ‘ಸುಗ್ಗಿ – ಮೀನ’ ತಿಂಗಳು . ಬೆಳೆದ ಗೆಣಸು ಮುಂತಾದುಗಳನ್ನು‌ ಅಗೆದು ತೆಗೆಯದಿದ್ದರೆ ಅವು ‘ಮಾಯಿ ತಿಂಗಳಲ್ಲಿ ಮಾಯವಾಗುತ್ತವಂತೆ” . ಹೀಗೊಂದು ಒಡಂಬಡಿಕೆ .

ಮುಂದೆ ಹಂತಹಂತವಾಗಿ ಬೇಸಾಯಕ್ಕೆ ಅಣಿಯಾಗುವ ರೈತ ಸುಗ್ಗಿ ತಿಂಗಳು ಮುಗಿದು ಪಗ್ಗು ತಿಂಗಳ ‘ಮೊದಲ ದಿನ – ತಿಂಗೊಡೆ’ ಮೊದಲ ಹಬ್ಬ ಯುಗಾದಿ ಅಥವಾ ಇಗಾದಿ – ವಿಷು ಆಚರಿಸುತ್ತಾನೆ .ಇಗಾದಿ ಆಚರಣೆ ಸರಳವಾದುದು ,ಚೌತಿ , ದೀಪಾವಳಿಗಳಂತೆ ಸಂಭ್ರಮಗಳಿಲ್ಲ .ಆದರೆ ಕೃಷಿಕನಿಗೆ “ಪುಂಡಿಬಿತ್ತ್ ಪಾಡುನು – ನಾಲೆರು ಮಾದಾವುನ” ಕೃಷಿ ಚಕ್ರವನ್ನು ಮತ್ತೆ ಆರಂಭಿಸುವ ಕ್ರಮವಿದೆ .

ಮುಂದೆ ‘ಪಗ್ಗು ತಿಂಗಳ‌ ಹದಿನೆಂಟು ಹೋಗುವ ದಿನ’ ತನ್ನ ಕೃಷಿ ಭೂಮಿಗೆ ಬೇಕಾಗುವಷ್ಟು ‘ನೇಜಿ’ ಹಾಕುವ ಸಾಂಪ್ರದಾಯಿಕ ಕ್ರಮ. ಈ ನಡುವೆ ‘ಕಜೆಬಿದೆ ಆವ – ಮಡಿಬಿದೆ ಆವ’ ಎಂಬ ನಿಷ್ಕರ್ಷೆಗೆ ಅನುಗುಣವಾಗಿ ನೇಜಿ ಹಾಕುವ ಪದ್ಧತಿಯೂ ಒಂದಿದೆ.

ಕೃತ್ತಿಕಾ ಮಳೆಯ ಕಾಲ ಆರಂಭವಾಗುತ್ತದೆ. ಈ ಮಳೆ ಬರಬಾರದು “ಕಿರ್ತಿಕೆ ಕಾಯೊಡು”- ಕೃತ್ತಿಕೆಯ ಬಿಸಿಲಿಗೆ ಭೂಮಿ ಸುಡಬೇಕು – ಬಿಸಿಗೆ ಭೂಮಿ ‘ಬಿರಿಯ’ ಬೇಕು. ಭಾಗೀರಥೀ ಜನ್ಮದಿನ‌’ ಒದಗಿಬರುತ್ತದೆ.

ಮಳೆಬಂದಾಗ ಭೂಮಿ ತನ್ನೊಳಗೆ ಮಳೆ ನೀರು ಇಳಿಸಿಕೊಂಡು – ಹಾಕುವ ಗೊಬ್ಬರ ಮತ್ತು ಸಿದ್ಧಗೊಳಿಸಿದ ಸುಡುಮಣ್ಣುಗಳಿಂದಾಗಿ ( ತೂಟಾನ್ – ತೂಂಟಾನ್) ಫಲವತ್ತಾದ ಕ್ಷೇತ್ರ ವಾಗುತ್ತದೆ , ಮುಂದೆ ಬೀಜಾಂಕುರವಾದಾಗ ಭೂಮಿದೇವಿ ತನ್ನ ಫಲವಂತಿಕೆಯನ್ನು ವ್ಯಕ್ತಗೊಳಿಸುತ್ತಾಳೆ .

ಬಿಸಿಲ ಬೇಗೆಗೆ ಸುಟ್ಟ ಗದ್ದೆಗೆ ಮೊದಲ ಮಳೆ ನೀರು ಬಿದ್ದಾಗ ಒಂದು‌ ಅಪೂರ್ವ ಪರಿಮಳ ಭೂಗರ್ಭದಿಂದ ಹೊರಬರುತ್ತದೆ . ಅದಕ್ಕಲ್ಲವೇ “ಪೃಥ್ವೀ ಗಂಧವತೀ” ಎಂದರು ನಮ್ಮ ಪೂರ್ವಸೂರಿಗಳು .ಇದು ಮಣ್ಣಿನ ಪರಿಮಳ ,ಇದೇ ಕಾರಣವಾಗಿ ಬೆನ್ನಿ – ಬೇಸಾಯ ಸಮೃದ್ಧವಾಗಿತ್ತು ಒಂದು ಕಾಲದಲ್ಲಿ .

ಈಗ ಮಣ್ಣಿಗೆ ಅಥವಾ ಪೃಥ್ವಿಗೆ ಗಂಧವಿದೆಯಾ …ಅದು ಅಷ್ಟು ಸುವಾಸನೆಯುಳ್ಳದ್ದಾ …ಎಂದು ಕೇಳುವವರಿದ್ದಾರೆ . ಆದರೆ ಬೇಸಾಯವೇ ಜೀವನಾಧಾರವಾಗಿದ್ದ ಕಾಲದಲ್ಲಿ ಮಣ್ಣಿನ ಪರಿಮಳ ಗ್ರಹಿಸುತ್ತಿದ್ದ ಮಾನವ .‌

ಆಗ ಅದೇ ಸುಗಂಧವಾಗಿತ್ತು , ಏಕೆಂದರೆ ಭೂಮಿ ತಾಯಿಯಾಗಿದ್ದಳು .ಜಡವಾದ ಭೂಮಿ ಯೊಂದಿಗೆ ಎಂತಹ ಭಾವನಾತ್ಮಕ ಸಂಬಂಧ.‌ ಹಾಗೆ ಬಂದಿರಬೇಕು “ಮಣ್ಣ್ ಡ್ ಪೊಂರ್ಬಿನಾಯೆ ನುಪ್ಪು ತಿನುವೆ , ನರಮಾನಿಡ ಪೊಂರ್ಬಿನಾಯೆ ಮಣ್ಣ್ ತಿನುವೆ” ಎಂಬ ಗಾದೆ .

ಪತ್ತನಾಜೆ ಮುಗಿಸಿ ಬೇಸಾಯಕ್ಕೆ ಹೊರಡುವ ಸಂದರ್ಭ ಭೂಮಿ ,ಬೇಸಾಯ , ನಮ್ಮ – ಮಣ್ಣಿನ ಸಂಬಂಧ ಮಣ್ಣಿನ ಸತ್ಯದ ದರ್ಶನವಾಗಲು ಅಥವಾ ‘ಸತ್ಯ ನೆಗತ್ತ್ ದ್’ ತೋಜೊಡ್ಡ ‘ ಪತ್ತನಾಜೆ
ಪರ್ವಕಾಲ ,ಸುಸಂದರ್ಭ . ಇನ್ನು ನಮಗೆ “ಬೆನ್ನಿದ ಮಗೆ” – ಬೇಸಾಯಗಾರ ಸಿಗುವುದು ಆಟಿ ತಿಂಗಳಲ್ಲಿ .

ಬಳಿಕ ಅಷ್ಟಮಿ ,ಚೌತಿ ಆಚರಣೆಗಳಲ್ಲಿ .ಅನಂತರ ತೆನೆಕಟ್ಟುವ ಸಂಭ್ರಮದಲ್ಲಿ , ನವರಾತ್ರಿಯ ವೇಳೆ .ಆದರೆ ನಗುಮೊಗದಿಂದ ಬೇಸಾಯಗಾರ‌ನ ಮುಖಾಮುಖಿಯಾಗುವುದು ದೀಪಾವಳಿಯ ಗೌಜಿ ಗದ್ದಲದಲ್ಲಿ ಬೆಳಗುವ ಸೊಡರಿನಲ್ಲಿ ,ಆಗ ಧಾನ್ಯಲಕ್ಷ್ಮೀ ಮನೆ ತುಂಬಿರುತ್ತಾಳೆ .ಆತ ಸಂತೃಪ್ತನಾಗಿರುತ್ತಾನೆ.

“ಕೃಷಿಯಿದ್ದಲ್ಲಿ ದುರ್ಭಿಕ್ಷೆ ಇಲ್ಲವಂತೆ” ಪತ್ತನಾಜೆ ಎಂದು ಆರಂಭಿಸಿ ದೀಪಾವಳಿ ವರಗೆ ಹೋಗ ಬೇಕಾಯಿತು . “ಭೂಮಿ -ಕೃಷಿ’ ಈ ಸಂಬಂಧ ಮತ್ತೆ ಗಾಢವಾಗಬೇಕೆಂಬುದೇ ಆಶಯ .ಹಾಗೆ ಎಲ್ಲಿಂದಲೋ ಹೊರಟು ಬೇಸಾಯಗಾರನಲ್ಲಿ ಮಾತನಾಡಿ ,ನಿಸರ್ಗದ ವಿಸ್ಮಯಗಳನ್ನು ಅವಲೋಕಿಸುತ್ತಾ , ಮಳೆಯ ಅನಿವಾರ್ಯತೆಯನ್ನು ಹೇಳುತ್ತಾ ‘ಕೃಷಿ ಸಂಸ್ಕೃತಿ”ಯನ್ನು ಪರಿಚಯಿಸುವ ಪ್ರಯತ್ನಮಾಡಿದೆ.

 
 
 
 
 
 
 
 
 
 
 

Leave a Reply