ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಬೀಳ್ಕೊಡುಗೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆಗೆ ಕಾಲೇಜಿನಲ್ಲಿ ನಡೆದ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲರನ್ನು ಅಭಿನಂದಿಸಿದರು.

ಬಳಿಕ ಶಾಸಕರು ಮಾತನಾಡಿ ತೆಂಕನಿಡಿಯೂರು ಕಾಲೇಜಿನ ಅಭಿವೃದ್ಧಿಯಲ್ಲಿ ಬಾಲಕೃಷ್ಣ ಹೆಗ್ಡೆಯವರು ಪ್ರಾಮಾಣಿಕವಾಗಿ ಪ್ರಯತ್ನಗಳನ್ನು ನಡೆಸಿದ್ದಾರೆ. ವ್ಯಕ್ತಿಗೆ ಹುದ್ದೆಯಿಂದ ನಿವೃತ್ತಿಯಾದರೂ ಪ್ರವೃತ್ತಿ, ಆಸಕ್ತಿ ಮತ್ತು ಹುಮ್ಮಸ್ಸಿನ ವಿಚಾರದಲ್ಲಿ ನಿವೃತ್ತಿ ಆಗಬಾರದು. 37 ವರ್ಷಗಳ ಕಾಲ ಸುದೀರ್ಘ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಬಾಲಕೃಷ್ಣ ಹೆಗ್ಡೆಯವರ ಮುಂದಿನ ಜೀವನ ಸುಖಮಯವಾಗಲಿ ಎಂದು ಶುಭ ಹಾರೈಸಿದರು.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿ ಮಂಗಳೂರಿನ ಜಂಟಿ ನಿರ್ದೇಶಕ ಪ್ರೊ. ವಸಂತರಾಜ ಶೆಟ್ಟಿ, ವಿಶೇಷಾಧಿಕಾರಿ ಜಯಕರ ಭಂಡಾರಿ, ಮುಂದಿನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಲಿರುವ ಡಾ. ಗಣನಾಥ ಶೆಟ್ಟಿ ಎಕ್ಕಾರು, ಡಾ. ಸುರೇಶ್ ರೈ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆನಂದ ಸುವರ್ಣ, ಮಂಜುಳಾ ವಿ. ಪ್ರಸಾದ್, ವಿಜಯ್ ಕೊಡವೂರು, ದಯಾನಂದ ಶೆಟ್ಟಿ, ಪ್ರೊ. ಮಹೇಶ್ ರಾವ್ ಬೋಧಕರು ಬೋಧಕೇತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply