ಬೆಂಗಳೂರು: ಕರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಕುರಿತು ಉಂಟಾಗಿದ್ದ ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಜುಲೈ 1ರಿಂದ ಶಾಲೆಗಳು ಆರಂಭಗೊಳ್ಳಲಿವೆ ಎಂದು ಘೋಷಿಸಿದ್ದಾರೆ.
ಶುಕ್ರವಾರ ಈ ವಿಷಯದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್, ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಜೂನ್ 15ರಿಂದ ದಾಖಲಾತಿ ಆರಂಭಗೊಳ್ಳಲಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗಿದೆ.
ಕರೋನಾ ಪರಿಸ್ಥಿತಿ ಗಮನಿಸಿ,ಆನ್ಲೈನ್ ಅಥವಾ ಭೌತಿಕ ತರಗತಿಗಳನ್ನು ನಡೆಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು.ಪೋಷಕರು ಗಾಬರಿಯಾಗುವ ಅಗತ್ಯವಿಲ್ಲ ಎಂದರು.ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದ ವಿವಾದ ಹೈಕೋರ್ಟ್ ಮುಂದಿದೆ.ಅಲ್ಲಿ ಸರ್ಕಾರದ ಪರ ವಾದವನ್ನು ಮಂಡಿಸಲಾಗಿದೆ. ನ್ಯಾಯಾಲಯ ಶೀಘ್ರ ತೀರ್ಪು ನೀಡಿದಲ್ಲಿ ಎಲ್ಲಾ ಗೊಂದಲಗಳಿಗೆ ಉತ್ತರ ದೊರೆಯಲಿದೆ ಎಂದು ತಿಳಿಸಿದ್ದಾರೆ.