ಬೆಂಗಳೂರು: ನವೆಂಬರ್ 5ರಿಂದ ಶಿಕ್ಷಕರ ವರ್ಗಾವಣಾ ಪ್ರಾರಂಭವಾಗಲಿದೆ. ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಈಗಾಗಲೇ ತಡವಾಗಿದದ್ದು, ಅದನ್ನು ತಡಮಾಡದೇ ಆರಂಭಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರದಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದರು.
ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲ ಆದ್ಯತೆ ಸಿಗಲಿದೆ. ಈ ಬಗ್ಗೆ ತಕ್ಷಣವೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇನ್ನು ಇಲಾಖೆಯು ಶಿಕ್ಷಕರ ವರ್ಗಾವಣೆ ಸಂಬಂಧದ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಿದೆ ಎಂದು ಸಚಿವರು ಹೇಳಿದ್ದಾರೆ. ಈ ಮೂಲಕ ಮತ್ತೆ ವರ್ಗಾವಣೆ ಪ್ರಕ್ರಿಯೆ ಪುನರಾರಂಭವಾಗಿದೆ.