ಕೋವಿಡ್ ನಿಯಂತ್ರಣಕ್ಕೆ ತಜ್ಞರ ಸಲಹೆ ತಪ್ಪದೇ ಪಾಲಿಸಿ: ಡಿಸಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ 2 ನೇ ಹಂತದ ಕೋವಿಡ್ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು, ತಜ್ಞರ ಸಮಿತಿ ನೀಡುವಂತಹ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅವರು ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಗಳು ಗಣನೀಯವಾಗಿ ಕಡಿಮೆಯಾಗುವುದರ ಜೊತೆಗೆ ಮರಣ ಪ್ರಮಾಣವು ಸಹ ಇಡೀ ರಾಜ್ಯದಲ್ಲೇ ಅತ್ಯಂತ ಕಡಿಮೆಯಾಗಿದೆ, ಸಾರ್ವಜನಿಕರು ಇದರಿಂದ ಮೈ ಮರೆಯದೇ, ತಜ್ಞರು ಈಗಾಗಲೇ ಸಲಹೆ ನೀಡಿರು ವಂತೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಯೊಬ್ಬರೂ ತಪ್ಪದೇ ಮಾಸ್ಕ್ ಗಳನ್ನು ಧರಿಸುವುದರೊಂದಿಗೆ, ಸಾಮಾಜಿಕ ಅಂತರ ಸೇರಿದಂತೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಕೋವಿಡ್ ನ ನಿಯಂತ್ರಣಕ್ಕೆ ಸರಕಾರಿ ಮತ್ತು ಖಾಸಗಿ ವೈದ್ಯರು ಉತ್ತಮವಾಗಿ ಸೇವೆ ಸಲ್ಲಿಸಿದ್ದು, ಇದಕ್ಕಾಗಿ ಅವರಿಗೆ ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳು ತೆರೆಯಲಿದ್ದು, ಜಿಲ್ಲೆಗೆ ಹೊರರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕು, ಯಾವುದೇ ಸಭೆ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಜನ ಸೇರದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. 
ಈ ಬಗ್ಗೆ ಪರಿಶೀಲಿಸಲು ಅಧಿಕಾರಿಯೊಬ್ಬರನ್ನು ನಿಯೋಜಿಸಬೇಕು, ಖಾಸಗಿ ಆಸ್ಪತ್ರೆಗಳಲ್ಲಿ ತೀವ್ರತರ ಖಾಯಿಲೆಗಳಿಗೆ ದಾಖಲಾ ಗುವ ರೋಗಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸ ಬೇಕೆಂದರು. ಕೋವಿಡ್ ನಿಯಂತ್ರಣ ಕುರಿತು ಸಾರ್ವಜನಿಕರು ತೆಗೆದು ಕೊಳ್ಳುವ ಕ್ರಮಗಳ ಬಗ್ಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದರು. ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ.ಪ್ರಶಾಂತ ಭಟ್, ಡಾ.ಪ್ರೇಮಾನಂದ್ ಹಾಗೂ ತಜ್ಞರ ಸಮಿತಿಯಲ್ಲಿನ ವೈದ್ಯರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply