ಡಾ.ರಂಜನ್ ಪೈ ಅವರಿಂದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ರೋಟರಿ ಮಾಹೆ ಸ್ಕಿನ್ ಬ್ಯಾಂಕ್” ಲೋಕಾರ್ಪಣೆ

ಕರಾವಳಿ ಕರ್ನಾಟಕದ ಮೊಟ್ಟಮೊದಲ ಸ್ಕಿನ್ ಬ್ಯಾಂಕ್ (ಚರ್ಮ ನಿಧಿ)
ಮಣಿಪಾಲ : ಆಗಸ್ಟ್ 2021ನೇ ಶನಿವಾರದಂದು ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದ ಮೊಟ್ಟಮೊದಲ ಸ್ಕಿನ್ ಬ್ಯಾಂಕ್ (ಚರ್ಮ ನಿಧಿ) ಅನ್ನು ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಅಧ್ಯಕ್ಷರಾದ ಡಾ.ರಂಜನ್ ಆರ್ ಪೈ ಉದ್ಘಾಟಿಸಿದರು. ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಪಾಲುದಾರಿಕೆಯಲ್ಲಿ  ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ರೋಟರಿ ಮಾಹೆ  ಸ್ಕಿನ್ ಬ್ಯಾಂಕ್’ ” ಅನ್ನು ಸ್ಥಾಪಿಸಲಾಗಿದೆ. 
ರೋಟರಿ ಕ್ಲಬ್ ಮಣಿಪಾಲ್ ಟೌನ್ ಉಪಕರಣಗಳನ್ನು ಖರೀದಿಸಲು ರೋಟರಿ ಫೌಂಡೇಶನ್‌ನ ಜಾಗತಿಕ ಅನುದಾನ ಕಾರ್ಯಕ್ರಮದಡಿ  83 ಲಕ್ಷ ರೂಪಾಯಿಗಳನ್ನು ನೀಡಿತು, ಮತ್ತು ಅವಶ್ಯಕ  ಮೂಲಸೌಕರ್ಯ ಗಳಿಗೆ  ಮಾಹೆ  50 ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ನೀಡಿತು.

ರೋಟರಿ ಮಾಹೆ  ಸ್ಕಿನ್ ಬ್ಯಾಂಕ್  ಉದ್ಘಾಟಿಸಿ ಮಾತನಾಡಿದ , ಡಾ ರಂಜನ್ ಪೈ ಅವರು , “ಈ ಸ್ಕಿನ್ ಬ್ಯಾಂಕ್ ನಿಂದ ಈ ಪ್ರದೇಶದ ಸುಟ್ಟ ಗಾಯಗಳ ಸಂತ್ರಸ್ತರಿಗೆ, ವಿಶೇಷವಾಗಿ ಹಿಂದುಳಿದ ಜನರಿಗೆ ಸಹಾಯವಾಗಲಿದೆ.  ಸ್ಕಿನ್ ಬ್ಯಾಂಕ್‌ನಲ್ಲಿ ಸುಲಭವಾಗಿ ಲಭ್ಯವಿರುವ ಚರ್ಮವನ್ನು ಬಳಸಿಕೊಂಡು  ಸ್ಕಿನ್ ಗ್ರಾಫ್ಟಿಂಗ್  ಮಾಡುವ ಮೂಲಕ, ರೋಗಿಗಳಿಗೆ ಉತ್ತಮ ಆರೈಕೆ ಸಿಗಲಿದೆ, ಮತ್ತು ಅವರ ಜೀವನದ ಗುಣಮಟ್ಟ ಮತ್ತು ಆತ್ಮವಿಶ್ವಾಸ ಹೆಚ್ಚಲಿದೆ.

ಅತ್ಯಾಧುನಿಕ ಮತ್ತು ಗುಣಮಟ್ಟದ ವೈದ್ಯಕೀಯ ಆರೈಕೆ ನೀಡುವಲ್ಲಿ ಮಾಹೆ ಯಾವಾಗಲೂ ಮುಂಚೂಣಿಯಲ್ಲಿದೆ.  ಈ ಸ್ಕಿನ್ ಬ್ಯಾಂಕ್‌ನೊಂದಿಗೆ, ಮಾಹೆ  ವೈದ್ಯರು ಸುಟ್ಟ ಸಂತ್ರಸ್ತರಿಗೆ ಚಿಕಿತ್ಸೆ ನೀಡುವಲ್ಲಿ ತಮ್ಮ ಚಾಣಾಕ್ಷ ಕೌಶಲ್ಯಗಳೊಂದಿಗೆ ಗುಣಪಟ್ಟದ ಸೇವೆ ನೀಡಲಿದ್ದಾರೆ.  ಇದನ್ನು ಸಾಧ್ಯವಾಗಿಸಿದ ರೋಟರಿ ಮತ್ತು ಮಾಹೆ ತಂಡವನ್ನು ನಾನು ಅಭಿನಂದಿಸುತ್ತೇನೆ” ಎಂದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ  ಪ್ಲಾಸ್ಟಿಕ್ ಸರ್ಜರಿ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ ಎನ್ ಸಿ ಶ್ರೀಕುಮಾರ್ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸ್ಕಿನ್ ಬ್ಯಾಂಕ್‌ನ ಅಗತ್ಯತೆ ಮತ್ತು ಉಪಯುಕ್ತತೆಯನ್ನು ವಿವರಿಸಿದರು. ಅವರು ಮಾತನಾಡುತ್ತಾ  “ದೊಡ್ಡ ಸುಟ್ಟ ಗಾಯಗಳ ಸಂದರ್ಭಗಳಲ್ಲಿ, ಅಂದರೆ, ಶೇಕಡಾ 30-40 ಕ್ಕಿಂತ ಹೆಚ್ಚು ಗಾಯಗೊಂಡರೆ, ರೋಗಿಗಳು ತಮ್ಮ ಚರ್ಮವನ್ನು ಬಳಸಿಕೊಳ್ಳಲು ಆಗುವುದಿಲ್ಲ.  ಹಲವಾರು ದುಬಾರಿ ದರದ  ಬದಲಿ ಚರ್ಮಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದರೂ, ಮೃತ  ಮಾನವರ  ಚರ್ಮವು  ಅತ್ಯುತ್ತಮ ಬದಲಿ ಚರ್ಮವಾಗಿದೆ. 

ಕಸ್ತೂರ್ಬಾ ಆಸ್ಪತ್ರೆಯಲ್ಲಿ  ಈಗ ಸ್ಕಿನ್ ಬ್ಯಾಂಕ್ ಆರಂಭವಾಗುತ್ತಿರುವುದರಿಂದ, ಸುಟ್ಟ ಗಾಯದ ರೋಗಿಗಳು ಭಾರತದ ಇತರ ಭಾಗಗಳಿಂದ ಚರ್ಮವನ್ನು ಪಡೆಯಲು ನಿರ್ಣಾಯಕ ಅವಧಿಯ 2-3 ದಿನಗಳವರೆಗೆ ಕಾಯಬೇಕಾಗಿಲ್ಲ. ಚರ್ಮದ ಲಭ್ಯತೆಯೂ ಒಂದು ಸಮಸ್ಯೆಯಾಗಿದೆ. ನಮ್ಮದೇ ಚರ್ಮವನ್ನು ನಾವು  ಮರಳಿ ಪಡೆಯುವ ಮೂಲಕ, ನಾವು ಬೇಗನೆ ಚಿಕಿತ್ಸೆಯನ್ನು ಪ್ರಾರಂಭಿಸಬಹುದು ಮತ್ತು ನೋವನ್ನು ಕಡಿಮೆ ಮಾಡಬಹುದು ಜೊತೆಗೆ  ಜೀವ ಉಳಿಸಬಹುದು” ಎಂದು ಹೇಳಿದರು .

ಸಮಾರಂಭದ ಮುಖ್ಯ ಅತಿಥಿಯಾಗಿದ್ದ  ರೋಟರಿ ಜಿಲ್ಲಾ 3182ನ  ಗವರ್ನರ್ Rtn   ಪಿಎಚ್‌ಎಫ್ ಎಂಜಿ ರಾಮಚಂದ್ರ ಮೂರ್ತಿಯವರು, “ರೋಟರಿಯ ಈ ವರ್ಷದ ಥೀಮ್ ‘ಜೀವನವನ್ನು ಬದಲಾಯಿಸಲು ಸೇವೆ ಮಾಡುವುದು’. ರೋಟರಿ ಮತ್ತು  ಮಾಹೆಯ   ಜಂಟಿ ಯೋಜನೆಯು  ಜನರ ಜೀವನವನ್ನು ಬದಲಿಸಲು ಸಮುದಾಯಕ್ಕೆ ಸ್ಕಿನ್ ಬ್ಯಾಂಕ್ ಅನ್ನು ನೀಡುತ್ತಿದೆ.

ರೋಟರಿ ಫೌಂಡೇಶನ್, ಮಾಹೆ,  ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3182 ಮತ್ತು ಈ ಯೋಜನೆಯಲ್ಲಿ ಕೈ ಜೋಡಿಸಿದ  ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ” ಎಂದರು. Rtn ಎಂಜಿ ರಾಮಚಂದ್ರ ಮೂರ್ತಿಯವರು Rtn ಸದಾನಂದ ಚಾತ್ರ, Rtn ರಾಜಾರಾಮ್ ಭಟ್ ಮತ್ತು Rtn ಗಣೇಶ್ ನಾಯಕ್ ರವರೊಂದಿಗೆ ಸ್ಕಿನ್ ಬ್ಯಾಂಕ್ ಉಪಕರಣಗಳನ್ನು ಮಾಹೆಗೆ ಹಸ್ತಾಂತರಿಸಿದರು. 
ಮಾಹೆಯ ಪರವಾಗಿ  ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್.ಬಲ್ಲಾಳ್   ಉಪ ಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮತ್ತು ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿಗಳಾದ ಸಿ ಜಿ ಮುತ್ತಣ್ಣ  ಸ್ವೀಕರಿಸಿದರು . 
 ಅತಿಥಿಗಳಲ್ಲಿ ಒಬ್ಬರಾದ ನವಿ ಮುಂಬೈನ ನ್ಯಾಷನಲ್ ಬರ್ನ್ಸ್ ಸೆಂಟರ್‌ ಮತ್ತು ಸ್ಕಿನ್ ಬ್ಯಾಂಕ್ನ  ನಿರ್ದೇಶಕರಾದ ಡಾ ಸುನಿಲ್ ಕೇಶ್ವಾನಿ, “ಮಣಿಪಾಲದಲ್ಲಿ ಸ್ಕಿನ್ ಬ್ಯಾಂಕ್ ಬಂದಿರುವುದು ಕರ್ನಾಟಕಕ್ಕೆ ನಿಜಕ್ಕೂ ಮಹತ್ವದ ದಿನವಾಗಿದೆ. ಇದು ಅನೇಕ ಜೀವಗಳನ್ನು ಉಳಿಸಲು ಕಾರಣವಾಗಲಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಕೆಎಂಸಿ ಮಣಿಪಾಲ ಮತ್ತು ರೋಟರಿ ಕ್ಲಬ್ ಮಣಿಪಾಲ ಟೌನ್ ಗೆ ನನ್ನ ಅಭಿನಂದನೆಗಳು ” ಎಂದರು.

ಸಮಾರಂಭದ ಮುಖ್ಯ ಅತಿಥಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮಾತನಾಡಿ, “ರೋಟರಿ ಮಾಹೆ  ಸ್ಕಿನ್ ಬ್ಯಾಂಕ್ ಅನ್ನು ಮಣಿಪಾಲದಲ್ಲಿ  ಸ್ಥಾಪಿಸುವುದ ರೊಂದಿಗೆ, ಈ ಪ್ರದೇಶದ ಪ್ರಮುಖ ಸುಟ್ಟಗಾಯ ರೋಗಿಗಳಿಗೆ ಚರ್ಮವನ್ನು ಲಭ್ಯವಾಗಿಸುವ ಹೆಚ್ಚುವರಿ ಜವಾಬ್ದಾರಿ ನಮ್ಮ ಮೇಲಿದೆ.

ಚರ್ಮದಾನ ಮಾಡಲು ಮತ್ತು ನಮ್ಮ ಸ್ಕಿನ್ ಬ್ಯಾಂಕ್‌ನಲ್ಲಿ ಸಾಕಷ್ಟು  ಚರ್ಮ ಸಂಗ್ರಹವಾಗಲು    ಜನರಲ್ಲಿ ಜಾಗೃತಿ ಮೂಡಿಸುವಲ್ಲಿ  ನಾವು ಆದ್ಯತೆಯ ಮೇಲೆ ಕೆಲಸ ಮಾಡೋಣ. ರೋಟರಿಯ ಲೋಕೋಪಕಾರಿ ಚಟುವಟಿಕೆಯ ಮೂಲಕ, ನಾವು ಇದನ್ನು ಸಾಧಿಸಲು ಸಾಧ್ಯವಾಗಿದೆ, ಮತ್ತು ಈ ಸ್ಕಿನ್ ಬ್ಯಾಂಕ್ ಸ್ಥಾಪಿಸಲು ಸಹಕರಿಸಿದ ಎಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಎಚ್ ಎಸ್ ಬಲ್ಲಾಳ್ ಅವರು ನಮ್ಮಲ್ಲಿ  ಪ್ಲಾಸ್ಟಿಕ್ ಸರ್ಜರಿ ವಿಭಾಗದ ಅಡಿಯಲ್ಲಿ 18 ಹಾಸಿಗೆಗಳನ್ನು ಹೊಂದಿರುವ ಪೂರ್ಣ ಪ್ರಮಾಣದ ಬರ್ನ್ಸ್ ಘಟಕವನ್ನು ಹೊಂದಿದ್ದೇವೆ.ಇದಕ್ಕೆ ಪೂರಕವಾಗಿ, ಖಂಡಿತವಾಗಿಯೂ ಸ್ಕಿನ್ ಬ್ಯಾಂಕ್ ನ ಅವಶ್ಯಕತೆ ಇದೆ.  
ಏಕೆಂದರೆ ಬಹುತೇಕ ಎಲ್ಲಾ ಸುಟ್ಟಗಾಯ ರೋಗಿಗಳಿಗೆ, ನಂತರ ಚರ್ಮದ ಕಸಿ ಅಗತ್ಯವಿರುತ್ತದೆ. ಅಂಗ ಮತ್ತು ಅಂಗಾಂಶ ದಾನವನ್ನು ನಮ್ಮೆಲ್ಲರ ಕರ್ತವ್ಯವೆಂದು ಪರಿಗಣಿಸಬೇಕು. ನಿಮ್ಮ ಅಂಗಗಳು ಮತ್ತು ಅಂಗಾಂಶಗಳನ್ನು ದಾನ ಮಾಡುವುದು ಕೇವಲ ದಾನ  ಮಾತ್ರವಲ್ಲ, ಇದು ಬೇರೆಯವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು  ತರಲಿದೆ” ಎಂದರು.

Rtn. ಪಿಎಚ್‌ಎಫ್ ಶೇಷಪ್ಪ ರೈ ಅವರು  ಪ್ರಮುಖ ಕೊಡುಗೆದಾರರಾದ ಅಮೆರಿಕದ Rtn, ಡಾ ವಸಂತ ಪ್ರಭು ಮತ್ತು Rtn. ದಿನೇಶ್ ನಾಯಕ್ ಮತ್ತು ರೋಟರಿ ಪ್ರತಿಷ್ಠಾನದ ಟ್ರಸ್ಟಿ Rtn. ಗುಲಾಮ್ ಎ ವಾಹನ್ವತಿಯ ಸಂದೇಶಗಳನ್ನು ಓದಿದರು. ರೋಟರಿ ಕ್ಲಬ್ ಮಣಿಪಾಲ ಟೌನ್ ಅಧ್ಯಕ್ಷ  Rtn. ಗಣೇಶ್ ನಾಯಕ್ ಸ್ವಾಗತಿಸಿದರು, ಮತ್ತು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ವಂದನಾರ್ಪಣೆ ಮಾಡಿದರು. Rtn. ಡಾ ರವಿರಾಜ ಎನ್ ಎಸ್, ನಿರ್ದೇಶಕರು-ಕಾರ್ಪೊರೇಟ್ ಸಂಬಂಧಗಳು, ಮಾಹೆ  ಇವರು ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.

 ರೋಟರಿ -ಮಾಹೆ  ಸ್ಕಿನ್ ಬ್ಯಾಂಕ್ ಸಹಾಯವಾಣಿ ಸಂಖ್ಯೆ -09686676564.

 
 
 
 
 
 
 
 
 
 
 

Leave a Reply