ಹುಬ್ಬಳ್ಳಿ: ರಾಜ್ಯದ ಹಲವು ನಗರಗಳಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಕಡೆಗಳಲ್ಲಿ ವಿಮಾನ ಹಾರಾಟಗಳ ಸಂಚಾರ ದಲ್ಲಿಯೂ ಅಸ್ತವ್ಯಸ್ತ ಉಂಟಾಗಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ ಇಂಡಿಗೋ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಲ್ಯಾಂಡ್ ಮಾಡಲಾಗದೆ ಆಕಾಶದಲ್ಲೇ ಕೆಲಕಾಲ ಹಾರಾಟ ನಡೆಸ ಬೇಕಾಯಿತು. ಇದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು
ಈ ವಿಮಾನದಲ್ಲಿ ಸಂಸದ ಅನಂತಕುಮಾರ ಹೆಗಡೆ ಹಾಗು 46 ಪ್ರಯಾಣಿಕರು ಇದ್ದರು.
ಈ ವಿಮಾನ ಹುಬ್ಬಳ್ಳಿ ನಿಲ್ದಾಣದಲ್ಲಿ ಬೆಳಗ್ಗೆ 8:55ಕ್ಕೆ ಲ್ಯಾಂಡ್ ಆಗಬೇಕಿತ್ತು. ಆದರೆ, ಹುಬ್ಬಳ್ಳಿಯಲ್ಲಿ ಹವಾಮಾನ ವೈಪರೀತ್ಯದ ಕಾರಣ ಏರ್ ಟ್ರಾಫಿಕ್ ಕಂಟ್ರೋಲ್ ನಿಂದ ಲ್ಯಾಂಡಿಂಗ್ಗೆ ಅನುಮತಿ ದೊರೆಯಲಿಲ್ಲ.
ಈ ಹಿನ್ನೆಲೆಯಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ವಿಮಾನ ಆಗಸದಲ್ಲೇ ಸುತ್ತಾಡತೊಡಗಿತು. ಇದರಿಂದಾಗಿ ಅನಂತ್ಕುಮಾರ್ ಸೆರಿದಂತೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೊನೆಗೆ 10:25ಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಈ ವೇಳೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ ಎಂದು ವರದಿಯಾಗಿದೆ.
ಕಳೆದ ವಾರ ಭಾರೀ ಮಳೆಯಿಂದಾಗಿ ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ತುತ್ತಾಗಿ 18 ಜನರು ಮೃತಪಟ್ಟಿದ್ದರು. ಈ ಘಟನೆ ಹಿನ್ನೆಲೆಯಲ್ಲಿ ಆತಂಕ ಇನ್ನೂ ಹೆಚ್ಚಾಗಿತ್ತು ಎನ್ನಲಾಗಿದೆ.
ಈ ನಡುವೆ ಹುಬ್ಬಳ್ಳಿ-ಧಾರವಾಡದ ತುಪ್ಪರಿ ಹಳ್ಳದ ತಾತ್ಕಾಲಿಕ ಸೇತುವೆ ಮುಳುಗಡೆ ಆಗಿದೆ.