ನವದೆಹಲಿ : ಪಿಎಂ ಕೇರ್ಸ್ ನಿಧಿಯಲ್ಲಿನ ಹಣವನ್ನು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಕೊರೊನಾ ವೈರಸ್ ವಿರುದ್ಧದ ಕಾರ್ಯಾಚ ರಣೆಗೆ ಬಳಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಂಡ್ ಸ್ಥಾಪಿಸಿದ್ದು, ಈ ಹಣವನ್ನು ವರ್ಗಾಯಿಸುವ ಅಗತ್ಯವಿಲ್ಲ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಎನ್ಡಿಆರ್ಅಫ್ಗೆ ಹಣವನ್ನು ದಾನ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ.
ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಅರ್ಜಿಯಲ್ಲಿ, ಪಿಎಂ ಕೇರ್ಸ್ ಫಂಡ್ನಲ್ಲಿ ಠೇವಣಿ ಇರಿಸಿದ ಹಣವನ್ನು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಎನ್ಡಿಆರ್ಎಫ್ ನಿಧಿಗೆ ವರ್ಗಾಯಿಸುವಂತೆ ಕೋರಲಾಗಿತ್ತು. ಪಿಎಂ ಕೇರ್ಸ್ ನಿಧಿಗೆ ದೇಣಿಗೆ ನೀಡುವುದನ್ನು ತಡೆಯಲು ಯಾವುದೇ ಸಂಸ್ಥೆಗೆ ಅಧಿಕಾರವಿಲ್ಲ. ಪಿಎಂ ಕೇರ್ಸ್ ಮೂಲಕ ಸಂಗ್ರಹಿಸಲಾಗುತ್ತಿರುವ ದೇಣಿಗೆಯು ದತ್ತಿ ಕಾರ್ಯಗಳಿಗೆ ಬಳಸಲಾಗುತ್ತದೆ. ಠೇವಣಿಯನ್ನು ಎನ್ಡಿಆರ್ಎಫ್ ವರ್ಗಾವಣೆ ಮಾಡುವ ಅವಶ್ಯಕತೆ ಇಲ್ಲ ಎಂದು ಕೋರ್ಟ್ ಹೇಳಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣೆಗೆ ಹೊಸದಾದ ಯೋಜನೆಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಅಶೋಕ್ ಭೂಷನ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಹೇಳಿದೆ.