ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನ ಆದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿ: ಕೋಟ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್ ನ ದುರಾಡಳಿತ, ತುಷ್ಟೀಕರಣ ನೀತಿ ಅಂದು ಡಾ! ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ದಿವ್ಯ ಚೇತನಗಳಿಂದ ಭಾರತೀಯ ಜನ ಸಂಘದ ಹುಟ್ಟಿಗೆ ಕಾರಣವಾಯಿತು. ಬಳಿಕ ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ತಳಹದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯವರಂತಹ ಧೀಮಂತ ನಾಯಕರ ಪರಿಶ್ರಮದಿಂದ ಎಪ್ರಿಲ್ 6, 1980ರಂದು ಭಾರತೀಯ ಜನತಾ ಪಾರ್ಟಿ ಸ್ಥಾಪನೆಗೊಂಡಿತು. ಪಕ್ಷದ ಸಂಸ್ಥಾಪಕರ ತ್ಯಾಗ, ಬಲಿದಾನ, ಆದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಎ.6ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ತತ್ವ ಸಿದ್ಧಾಂತಗಳು, ಉತ್ತಮ ಪ್ರಜಾಸತ್ತಾತ್ಮಕ ವ್ಯವಸ್ಥೆಯಿಂದ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಇಂದು ಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಧ್ವಜಾರೋಹಣ ನಡೆದಿದೆ. ಆದರೆ ಕಾಂಗ್ರೆಸ್ ತನ್ನ ಸದಸ್ಯತ್ವ ಅಭಿಯಾನದಲ್ಲಿ ಸಂಪೂರ್ಣ ವಿಫಲವಾಗಿ, ಬಿಜೆಪಿ ಸದಸ್ಯತ್ವ ಹೊಂದಿರುವ ಅಮಾಯಕ ಜನತೆಯನ್ನು ಯೋಜನೆಗಳ ಹೆಸರಿನಲ್ಲಿ ಯಾಮಾರಿಸಿ ಸದಸ್ಯತ್ವ ನೋಂದಣಿ ಮಾಡುತ್ತಿರುವ ದಯನೀಯ ಸ್ಥಿತಿಗೆ ತಲುಪಿರುವ ಸಂದಿಗ್ಧ ಸನ್ನಿವೇಶದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮುಂದಿನ ಚುನಾವಣೆಯಲ್ಲಿ ತನ್ನ ಪಕ್ಷದ ನಾಯಕರಿಗೆ 150 ಸ್ಥಾನಗಳ ಗುರಿಯನ್ನು ನೀಡಿರುವುದು ಹಾಸ್ಯಾಸ್ಪದವೆನಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತ ಬಂಧುಗಳು ಜಾಗೃತರಾಗಿ ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ಬದ್ಧತೆಯಿಂದ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮೇಲು, ಪಕ್ಷಕ್ಕಿಂತ ದೇಶ ಮೇಲು ಎಂಬ ತತ್ವವನ್ನು ಅನುಸರಿಸುತ್ತಿರುವ ಬಿಜೆಪಿ ವಿಶಿಷ್ಟ ಕಾರ್ಯ ಪದ್ಧತಿಯನ್ನು ಹೊಂದಿದೆ. ಕಾಂಗ್ರೆಸ್ ನ ದೇಶ ವಿರೋಧಿ ನೀತಿ, ತುರ್ತು ಪರಿಸ್ಥಿತಿ ಮುಂತಾದ ಜ್ವಲಂತ ಸನ್ನಿವೇಶಗಳನ್ನು ಸಮರ್ಥವಾಗಿ ಎದುರಿಸಿದ ಪರ್ಯಂತ ಜನ್ಮ ತಾಳಿದ ಬಿಜೆಪಿ ಇಂದು ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯತ್ವವನ್ನು ಹೊಂದಿರುವ ಬಲಿಷ್ಠ ರಾಜಕೀಯ ಪಕ್ಷವೆನಿಸಿದೆ. ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಪಕ್ಷದ ಹುಟ್ಟು ಮತ್ತು ಬೆಳವಣಿಗೆಗೆ ಕಾರಣರಾದ ಪಕ್ಷದ ಸಂಸ್ಥಾಪಕರು ಹಾಗೂ ಎಲ್ಲ ಹಿರಿಯರನ್ನು ಸ್ಮರಿಸಿಕೊಂಡು, ಸಮೃದ್ಧ ಸಶಕ್ತ ಭಾರತ ನಿರ್ಮಾಣದತ್ತ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು.

ಬಿಜೆಪಿ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಉಡುಪಿ ನಗರಾಭಿೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಹಾಗೂ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಕುತ್ಯಾರು ನವೀನ್ ಶೆಟ್ಟಿ ವಂದಿಸಿದರು.

 
 
 
 
 
 
 
 
 
 
 

Leave a Reply