ಪರಿಸರ ಸ್ನೇಹಿ ಗೌರಿ-ಗಣೇಶ ಚತುರ್ಥಿ ಆಚರಿಸಿ

ಉಡುಪಿ, ಆಗಸ್ಟ್ 26 (ಕವಾ) : ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೀರು ಕಲುಷಿತವಾಗಿ,
ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿ ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ
ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವಿಷಕಾರಿ ರಾಸಾಯನಿಕ, ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿಯ ಮೂರ್ತಿಯನ್ನು
ಪ್ರತಿಷ್ಠಾಪಿಸಬಹುದಾಗಿದೆ.

ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ
ಸೆಲೆಗಳು ಹಾಳಾಗುತ್ತದೆ. ಆದ್ದರಿಂದ ಬಕೆಟ್‌ನಲ್ಲಿ ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು.
ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ.
ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಪರಿಸರ ಇಲಾಖೆಯ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply