ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಶೂನ್ಯಕ್ಕೆ ಇಳಿಸಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ಕಾರ್ಯೋನ್ಮುಖವಾಗುವಂತೆ ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳೊಂದಿಗೆ ವೀಡಿಯೋ ಸಂವಾದದಲ್ಲಿ ಮಾತನಾಡಿದರು. ಎಲ್ಲಾ ಗ್ರಾಮಗಳು 10 ದಿನದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಪ್ರಸ್ತುತ ಕಂಡು ಬಂದಿರುವ ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಿ, ಯಾವುದೇ ಹೊಸ ಪ್ರಕರಣಗಳು ಕಂಡುಬರದಂತೆ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ತಮ್ಮ ವ್ಯಾಪ್ತಿಯಲ್ಲಿ ಕಠಿಣ ನಿರ್ಭಂಧಗಳನ್ನು ವಿಧಿಸಿ, ಕೋವಿಡ್ ಹರಡುವುದನ್ನು ನಿಯಂತ್ರಿಸಿ, ಕೋವಿಡ್ ಮುಕ್ತ ಗ್ರಾಮಗಳನ್ನಾಗಿಸಬೇಕು ಎಂದರು.
ಗ್ರಾಮದಲ್ಲಿ ಕೋವಿಡ್ ಸೋಂಕಿತರ ಮನೆಗಳನ್ನು ಸೀಲ್‌ಡೌನ್ ಮಾಡಿದ ನಂತರ ಅವರ ಜೀವನ ನಿರ್ವಹಣೆಗೆ ಯಾವುದೇ ತೊಂದರೆಯಾಗದಂತೆ ಪಂಚಾಯತ್ ವತಿಯಿಂದ ಆಹಾರ್ ಕಿಟ್‌ಗಳನ್ನು ವಿತರಿಸಬೇಕು. ಪ್ರತಿದಿನ ಅವರ ಆಕ್ಸಿಜನ್ ಪ್ರಮಾಣವನ್ನು ಪಲ್ಸ್ ಆಕ್ಸಿಮೀಟರ್ ಮೂಲಕ ಪರೀಕ್ಷಿಸಬೇಕು. ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಪ್ರತಿದಿನ ಅವರನ್ನು ಭೇಟಿ ಮಾಡಿ ಅವರಲ್ಲಿ ಒಂಟಿಯಲ್ಲ ಎಂಬ ಭಾವನೆ ಮೂಡಿಸಿ, ಧೈರ್ಯ ತುಂಬಬೇಕು ಎಂದರು.
ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ 50 ಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ಕಂಪ್ಲೀಟ್ ಲಾಕ್‌ಡೌನ್ ಮಾಡಲು ಈಗಾಗಲೇ ನಿರ್ಧರಿಸಿದ್ದು, ಗ್ರಾಮಗಳ ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಇತರೆ ಪಂಚಾಯತ್‌ಗಳ ಸಾರ್ವಜನಿಕರು ಗ್ರಾಮದೊಳಗೆ ಬರದಂತೆ ಮತ್ತು ಇಲ್ಲಿನ ಗ್ರಾಮಸ್ಥರು ಹೊರ ಹೋಗದಂತೆ ಕಾರ್ಯಪಡೆಯ ಸದಸ್ಯರು ಎಚ್ಚರವಹಿಸಬೇಕು. 
ಕೋವಿಡ್ ಹರಡುವುದನ್ನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಗ್ರಾಮಗಳ ಲಾಕ್‌ಡೌನ್ ಮಾಡುತ್ತಿದ್ದು, ಸಾರ್ವಜನಿಕರೂ ಅಗತ್ಯ ಸಹಕಾರ ನೀಡಬೇಕು ಎಂದು ಸಚಿವ ಕೋಟ ಹೇಳಿದರು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಪಾಸಿಟಿವ್ ಬಂದು ಅದರ ಮಾಹಿತಿಯನ್ನು ಗ್ರಾಮ ಪಂಚಾಯತ್‌ಗಳಿಗೆ ನೀಡದ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದ ಸಚಿವ ಕೋಟ, ಹೋಂ ಐಸೋಲೇಶನ್‌ನಲ್ಲಿದ್ದು ಸಾರ್ವಜನಿಕವಾಗಿ ಒಡಾಡುವವರ ವಿರುದ್ಧ ಸಹ ಪ್ರಕರಣ ದಾಖಲಿಸಿ ಹಾಗೂ ಅಂತಹವರ ಕೈಗಳಿಗೆ ಸೀಲ್ ಹಾಕುವಂತೆ ಸೂಚನೆ ನೀಡಿದರು.
ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಪಡೆಗಳು ವಾರದಲ್ಲಿ 2 ಬಾರಿ ಸಭೆ ಸೇರಿ ತಾವು ಕೈಗೊಳ್ಳಬೆಕಾದ ಕಾರ್ಯಗಳ ಕುರಿತು ಯೋಜನೆ ಹಾಕಿಕೊಂಡು ಅದರಂತೆ ಕಾರ್ಯನಿರ್ವಹಿಸಬೇಕು. ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ನಿಯಮಿತವಾಗಿ ಸೋಂಕಿತರ ಮನೆ ಭೇಟಿ ನೀಡಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಎಂದರು.
ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ನಿರ್ಬಂಧಗಳ ನಡುವೆ ಕ್ರಿಕೆಟ್ ಆಡುವವರು ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಅಗತ್ಯವಿದ್ದಲ್ಲಿ ಪೊಲೀಸರ ನೆರವು ಪಡೆಯಿರಿ ಎಂದರು. ಗ್ರಾಮ ಪಂಚಾಯತ್‌ಗಳಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಿ. ಪ್ರತಿದಿನ ಪಂಚಾಯತ್‌ಗಳಿಗೆ ಪೂರೈಕೆಯಾಗುವ ಲಸಿಕೆಯ ಪ್ರಮಾಣವನ್ನು ಮುಂಚಿತವಾಗಿ ತಿಳಿದುಕೊಂಡು, ಜನಸಂದಣಿ ಹಾಗೂ ಗೊಂದಲಗಳು ಉಂಟಾಗದಂತೆ ಸೂಕ್ತ ಯೋಜನೆ ರೂಪಿಸಿಕೊಂಡು ಲಸಿಕೆ ಹಾಕಿಸಿಕೊಳ್ಳುವ ವ್ಯವಸ್ಥೆ ಮಾಡಿ ಎಂದರು.
​ರಾಜ್ಯದಲ್ಲಿ ​ಗ್ರಾಮ ಪಂಚಾಯತ್ ಸದಸ್ಯರನ್ನು ಫ್ರಂಟ್‌ಲೈನ್ ವಾರಿಯರ್ಸ್  ಎಂದು ಘೋಷಿಸುವಂತೆ ತಾವು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದ ಮನವಿ ಕುರಿತಂತೆ ಇಂದು ಅಥವಾ ನಾಳೆ ಸರ್ಕಾರಿ ಆದೇಶ ಆಗಲಿದ್ದು, ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಎಲ್ಲಾ ಪಂಚಾಯತ್ ಜನಪ್ರನಿಧಿಗಳೂ ಸಹ ಸಕ್ರೀಯವಾಗಿ ಭಾಗವಹಿಸುವಂತೆ ತಿಳಿಸಿದ ಸಚಿವರು, ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಕಾರ್ಯದಲ್ಲಿ ಬಳಸಿಕೊಳ್ಳುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಹೇಳಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ವಿವಿಧ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಓ ಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply