ಮಲ್ಪೆ ಬೀಚ್ ಗೆ ಬರುಶ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : ಮಲ್ಪೆ ಬೀಚ್‌ಗೆ ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳು ಸೇರಿದಂತೆ ಅವರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. 

ತಮ್ಮ ಕಚೇರಿಯ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ ಬೀಚ್‌ಗೆ ದೇಶ ವಿದೇಶಗಳಿಂದ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು , ಪ್ರವಾಸಿಗರಿಗೆ ಅನುಕೂಲಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು , ವಾಹನಗಳ ಸುಗಮ ಸಂಚಾರಕ್ಕೆ ಉತ್ತಮ ರಸ್ತೆ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ಕಲ್ಪಿಸಿ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸುವಂತೆ ನೋಡಿಕೊಳ್ಳಬೇಕು ಎಂದರು.

ಮಲ್ಪೆ ಬೀಚ್‌ನಲ್ಲಿ ಈಗಾಗಲೆ ಕೈಗೊಂಡಿರುವ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲಿ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ, ಪ್ರವಾಸಿಗರ ಉಪಯೋಗಕ್ಕೆ ಅನುವು ಮಾಡಿ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲ್ಪೆ ಬೀಚ್ ನಲ್ಲಿ ಅತ್ಯಾಧುನಿಕ ಮೂಲಭೂತ ಸೌಕರ್ಯಗಳನ್ನೊಳಗೊಂಡ ಸಮಗ್ರ ಅಭಿವೃದ್ದಿಯ ನೀಲ ನಕಾಶೆಯನ್ನು ಮುಂದಿನ 20 ವರ್ಷದ ಕಲ್ಪನೆಯೊಂದಿಗೆ ತಯಾರಿಸಲು, ಸಮಾಲೋಚಕರೊಂದಿಗೆ ಚರ್ಚಿಸಿ ಶೀಘ್ರವಾಗಿ ಕರಡು ತಯಾರಿಸಿ ತಿಳಿಸಬೇಕು ಎಂದರು.

ಮಲ್ಪೆ ಬೀಚ್ ಪ್ರದೇಶದಿಂದ ಸೈಂಟ್‌ಮೆರಿಸ್ ದ್ವೀಪಕ್ಕೆ ಹೋಗುವ ಸ್ಪೀಡ್‌ಬೋಟ್‌ಗಳು, ಮಲ್ಪೆ ಬಂದರಿನಿಂದ ಹೋಗುವ ದೊಡ್ಡ ಬೋಟ್‌ಗಳು,ಮಲ್ಪೆ ಬೀಚ್ ಪ್ರದೇಶದಲ್ಲಿ ರೌಂಡಿಂಗ್ ಬೋಟ್ ಹಾಗೂ ವಾಟರ್ ಸ್ಕೂಟಿ ಬೋಟುಗಳು ಮತ್ತಿತರ ಜಲಕ್ರೀಡೆಗಳನ್ನು ನಡೆಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ,ಅವುಗಳಿಗೆ ಚಾಲನೆ ನೀಡುವಂತೆ ಸೂಚನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಬೀಚ್ ಗೆ ಬರುವ ಪ್ರವಾಸಿಗರಿಗೆ ಸಮುದ್ರದ ಅಪಾಯದ ಸ್ಥಳಗಳ ಬಗ್ಗೆ ಮಾಹಿತಿ ಕೊರತೆಯಿಂದಾಗಿ ಪ್ರಾಣಾಪಾಯಗಳು ಆಗುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಲು , ಸಮುದ್ರ ತೀರದಲ್ಲಿ ಮೈಕ್ ಮೂಲಕ ಎಚ್ಚರಿಕೆ ಸಂದೇಶಗಳನ್ನು ರವಾನಿಸಬೇಕು, ಒಂದೊಮ್ಮೆ ಅಪಾಯಕ್ಕೆ ಒಳಗಾದವರನ್ನು ರಕ್ಷಿಸಲು ಜೀವರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಸೂಚನೆ ನೀಡಿದರು.

ಶಾಸಕ ಕೆ ರಘುಪತಿ ಭಟ್ ಮಾತನಾಡಿ, ಪಡುಕೆರೆ ಬೀಚ್ ಸಹ ಉತ್ತಮ ಪ್ರವಾಸಿ ಸ್ಥಳವಾಗಿದ್ದು , ಅಲ್ಲಿಯೂ ಸಹ ಪ್ರವಾಸಿಗರ ಆಗಮನ ದಿನೇ ದಿನೇ ಹೆಚ್ಚುತ್ತಿದೆ,ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕು. ಬೀಚ್ ನ ಅಭಿವೃಧ್ದಿಯ ನಿರ್ವಹಣೆಗೆ ಸ್ಥಳೀಯ ಜನರನ್ನು ಒಳಗೊಂಡ, ಭಜನಾ ಮಂದಿರದ ಸದಸ್ಯರುಗಳು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಮಾಡುವುದರಿಂದ ನಿರ್ವಹಣೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಬೀಚ್‌ನಲ್ಲಿ ಪ್ರವಾಸಿಗರ ಮನರಂಜನೆ ಹಾಗೂ ಪ್ರಕೃತಿ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಹೆಚ್ಚು ಹೆಚ್ಚು ಪ್ರವಾಸಿ ಬೋಟುಗಳು, ಜಲಕ್ರೀಡೆ ಹಾಗೂ ಮತ್ತಿತರ ಉತ್ತಮ ಚಟುವಟಿಕೆಗಳನ್ನು ಕೈಗೊಂಡಾಗ ಪ್ರವಾಸಿಗರಿಗೆ ಹೆಚ್ಚಿನ ಮನೋಲ್ಲಾಸ ಸಿಗುತ್ತದೆ. ಅದಕ್ಕೆ ಆಸ್ಪದ ನೀಡಬೇಕು ಎಂದರು.

ಪಡುಕೆರೆ ಸಮುದ್ರತೀರಕ್ಕೆ ಹೊಂದಿಕೊಂಡಿರವ ಸರಕಾರಿ ಜಾಗವನ್ನು ಮರಿನ್ ಬೋರ್ಡ್ಗೆ ಹಸ್ತಾಂತರಿಸಲು ಸರಕಾರಕ್ಕೆ ಪತ್ರ ಬರೆಯುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಜಿಲ್ಲೆಯ ಕಲೆ ,ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ಥಳೀಯ ಕರಕುಶಲ ವಸ್ತಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಸೀವಾಕ್ ಪ್ರದೇಶದಲ್ಲಿ ಮಾರುಕಟ್ಟೆ ಮಳಿಗೆಯನ್ನು ಕಲ್ಪಿಸಬೇಕು, ಪ್ರವಾಸಿಗರು ಹೆಚ್ಚಾಗಿ ಆಗಮಿಸುವುದರಿಂದ ಸ್ಥಳೀಯ ಜನರಿಗೆ ಉದ್ಯೋಗ ದೊರೆಯುವುದರ ಜೊತೆಗೆ ಅರ್ಥಿಕ ಲಾಭ ದೊರೆಯುತ್ತದೆ ಎಂದರು.

ಸಭೆಯಲ್ಲಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭಾ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್‌ ಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ರಾಘವೇಂದ್ರ ಕಿಣಿ,ನಗರ ಸಭಾ ಆಯುಕ್ತ ಉದಯ ಶೆಟ್ಟಿ, ನಗರಸಭಾ ಸದಸ್ಯರುಗಳಾದ ಎಡ್ಲಿನ್ ಕರ್ಕಡ, ಸುಂದರ್ ಕಲ್ಮಾಡಿ, ವಿಜಯ್ ಕೊಡವೂರು, ವಿಜಯ್ ಕುಂದೂರು, ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply