ಕೊನೆಗೂ ಕ್ರೈಸ್ತ ಶಿಕ್ಷಕಿ ಸಸ್ಪೆಂಡ್..! ಶಾಲೆಯ ಮುಂದೆ ವಿದ್ಯಾರ್ಥಿಗಳಿಂದಲೇ ಜೈ ಶ್ರೀ ರಾಮ್ ಘೋಷಣೆ!

ಹಿಂದೂ ಧರ್ಮ ದೇವರುಗಳ ಬಗ್ಗೆ ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ನಗರದ ವಲೆನ್ಸಿಯಾದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಶಾಲಾಡಳಿತ ಮಂಡಳಿ ವಜಾಗೊಳಿಸಿದೆ.

ಎರಡು ದಿನಗಳಿಂದ ಪೋಷಕರು ಮತ್ತು ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಮಣಿದ ಆಡಳಿತ ಮಂಡಳಿ, ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಕೆಲವು ದಿನಗಳ ಹಿಂದೆ ಶಿಕ್ಷಕಿ ಪ್ರಭಾ “ವರ್ಕ್‌ ಈಸ್‌ ವರ್ಶಿಪ್‌’ ಪಾಠ ಮಾಡುವಾಗ ಹಿಂದೂ ಧರ್ಮ ಹಾಗೂ ಶ್ರೀರಾಮದೇವರನ್ನು ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರಲ್ಲಿ ತಿಳಿಸಿದ್ದರು. ಈ ಕುರಿತು ಪೋಷಕರೊಬ್ಬರು ಮಾತನಾಡಿದ್ದ ಬಗ್ಗೆ ಧ್ವನಿಮುದ್ರಣ ಸೋಶಿಯಲ್‌ ಮೀಡಿಯಾದಲ್ಲಿ ಹರಡಿದ್ದು ವಿಚಾರ ವಿವಾದವಾಗಿ ಬದಲಾಯಿತು. ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ವಲೆನ್ಶಿಯಾದ ಶಾಲೆಯ ಆವರಣದ ಹೊರಭಾಗದಲ್ಲಿ ಗೇಟ್‌ ಬಳಿ ಸೋಮವಾರ ಬೆಳಗ್ಗೆ ಪೋಷಕರು ಹಾಗೂ ಹಿಂದೂ ಸಂಘಟನೆ ಮುಖಂಡರು ಶಿಕ್ಷಕಿಯ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಿದರು. ಶಾಸಕ ವೇದವ್ಯಾಸ ಕಾಮತ್‌ ಅವರು ಕೂಡಾ ಈ ವೇಳೆ ಸೇರಿಕೊಂಡು ಶಾಲಾಡಳಿತ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಯಿತು. ಪ್ರತಿಭಟನೆಯ ತೀವ್ರತೆಗೆ ಮಣಿದ ಆಡಳಿತ ಮಂಡಳಿ ಪ್ರಮುಖರು ಕೊನೆಗೆ ಶಾಲಾ ಲೆಟರ್‌ ಹೆಡ್‌ನ‌ಲ್ಲಿ ಶಿಕ್ಷಕಿಯ ವಜಾ ಆದೇಶಪತ್ರ ಹೊರಡಿಸಿದೆ.

ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಪೋಷಕರನ್ನು ಗೇಟ್‌ ಹೊರಗೆ ಪೊಲೀಸರು ತಡೆದರು. ಈ ವೇಳೆ ಶಾಸಕ ವೇದವ್ಯಾಸ ಕಾಮತ್‌ ಆಗಮಿಸಿ ಸ್ಥಳದಲ್ಲಿದ್ದ ಬಿಇಒ ಹಾಗೂ ಡಿಡಿಪಿಐ ಅವರನ್ನು ತರಾಟೆಗೆ ತೆಗೆದುಕೊಂಡರು. ಕಚೇರಿಗೆ ಕರೆಸಿ ತನಿಖೆ ಮಾಡುವುದು ಬಿಟ್ಟು ನೀವೇ ಶಾಲೆಗೆ ಬಂದು ತನಿಖೆ ಮಾಡೋದು ಸರಿಯಾ ಎಂದು ಆಕ್ಷೇಪಿಸಿದರು. ಬಳಿಕ ಶಾಲಾವರಣದ ಒಳಗೆ ತೆರಳಿದ ವೇದವ್ಯಾಸ ಕಾಮತ್‌, ಮುಖ್ಯಶಿಕ್ಷಕಿ ಮತ್ತು ಶಾಲಾಡಳಿತ ಪ್ರಮುಖರನ್ನು ತರಾಟೆಗೆ ತೆಗೆದುಕೊಂಡರು. ಹಿಂದೂ ಧರ್ಮ ಅವಹೇಳನ ಮಾಡುವುದು ಎಷ್ಟು ಸರಿ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು.

ಪ್ರತಿಭಟನೆ ತೀವ್ರತೆ ಪಡೆಯುತ್ತಿರುವುದನ್ನು ಮನಗಂಡ ಶಾಲಾಡಳಿತ ಮಂಡಳಿಯವರು ಏಳನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಿದರು. ಆದೇಶಪತ್ರ ಹಿಡಿದು ಹೊರಬಂದ ಶಾಲೆಯ ಪ್ರಮುಖರು, ಪೋಷಕರ ಎದುರು ಅದನ್ನು ಓದಿಹೇಳಿದರು.

“ನಮ್ಮ ಸಂಸ್ಥೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಈಗ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ಸಂಸ್ಥೆಯಿಂದ ವಜಾಗೊಳಿಸಿ ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಕ ಮಾಡಲಾಗಿದೆ” ಎಂದು ಶಾಲೆಯ ಮುಖ್ಯ ಶಿಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆ ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ತೆಗೆದುಕೊಳ್ಳಲಾಗಿದೆ. ನಾವು ತನಿಖೆಯ ಅಂತಿಮ ಆದೇಶಕ್ಕೆ ಬದ್ಧರಾಗಿರುತ್ತೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿ ಸಹಕಾರ ನಿರೀಕ್ಷಿಸುತ್ತೇವೆ” ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಆದರೆ ಆದೇಶದಲ್ಲಿ ತಪ್ಪು ಒಪ್ಪಿಕೊಂಡಿಲ್ಲ. ಒಪ್ಪಿಕೊಳ್ಳದಿದ್ದರೆ ಬಿಡುವುದಿಲ್ಲ ಎಂದು ಶಾಸಕ ಕಾಮತ್‌ ಎಚ್ಚರಿಕೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಇದಕ್ಕೂ ಮೊದಲು, ವಜಾ ಆದೇಶ ಹೊರಡಿಸಿದ ಬಳಿಕ ಶಾಲೆ ವಿದ್ಯಾರ್ಥಿಗಳು, ಪೋಷಕರು ಶಾಲೆ ಎದುರು ಜೈಶ್ರೀರಾಮ್‌ ಎಂದು ಘೋಷಣೆ ಕೂಗಿ ಸಂಭ್ರಮಾಚರಿಸಿದರು.

ಈ ಪ್ರಕರಣದ ಕುರಿತು ಶಿಕ್ಷಣ ಇಲಾಖೆ ಆಂತರಿಕ ತನಿಖೆ ನಡೆಸಲಿದೆ. ಇದರ ವರದಿ ಆಧಾರದ ಮೇಲೆ ಪೊಲೀಸ್‌ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ.

ಶಾಲೆ ಎದುರು ಪ್ರತಿಭಟನೆ ನಡೆಸುವ ಮೊದಲು ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಪೋಷಕರು ದ.ಕ. ಜಿಲ್ಲಾ ಪಂಚಾಯತ್‌ ಕಟ್ಟಡದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಆದರೆ ಪೊಲೀಸರು ಮುಖ್ಯ ಪ್ರವೇಶದ್ವಾರವನ್ನು ಮುಚ್ಚಿ ಪ್ರತಿಭಟನಕಾರರನ್ನು ತಡೆದರು. ಧರ್ಮ ನಿಂದನೆ ಮಾಡಿದ ಶಿಕ್ಷಕಿಯನ್ನು ವಜಾ ಮಾಡಿ, ಕಠಿನ ಕ್ರಮ ಕೈಗೊಳ್ಳುವಂತೆ ಪ್ರತಿಭಟನಕಾರರು ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಬಿಜೆಪಿ ಶಾಸಕ ಡಾ| ಭರತ್‌ ಶೆಟ್ಟಿ, ಜಿ.ಪಂ. ಗೇಟ್‌ ಬಳಿ ಆಗಮಿಸಿದ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ತರಾಟೆಗೆ ತೆಗೆದುಕೊಂಡರು. ಮಂಗಳವಾರ ಸಂಜೆಯೊಳಗೆ ಕ್ರಮ ಕೈಗೊಳ್ಳದಿದ್ದರೆ ಬುಧವಾರ ಜಿಲ್ಲಾದ್ಯಂತ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ಸಂಘಪರಿವಾರದ ಕಾರ್ಯಕರ್ತರು ಮತ್ತು ಶಾಸಕರಿಬ್ಬರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜೆರೋಸಾ ಕಾನ್ವೆಂಟ್ ನ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಶಾಲಾ ಆಡಳಿತ ವಜಾ ಮಾಡಿದೆ.

 
 
 
 
 
 
 
 
 
 
 

Leave a Reply