ಬೆಂಗಳೂರನ್ನು ನಗರವನ್ನಾಗಿ ನಿರ್ಮಿಸಿದವರು ಕೆಂಪೇಗೌಡರು

ನಗರ ನಿಮರ್ಾಣದಲ್ಲಿ ವಿಶೇಷ ಆಸಕ್ತಿ ವಹಿಸಿ, ನಗರ ನಿರ್ಮಾಣದ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ದೇಶ ವಿದೇಶಗಳಲ್ಲಿ ಪರಿಚಿತವಾದ ಬೆಂಗಳೂರು ನಗರವನ್ನು ನಿರ್ಮಾಣ ಮಾಡಿದ ಕೀರ್ತಿ ಸಾಮಂತ ರಾಜ ಕೆಂಪೇಗೌಡ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದರು.

ಮಂಗಳವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕೆಂಪೇಗೌಡರು ನಗರ ನಿರ್ಮಾಣದ ಜೊತೆ ಜೊತೆಗೆ ಕೃಷಿಗೂ ಆದ್ಯತೆ ನೀಡಿದ್ದು ಹಲವಾರು ಕೆರೆ, ಕೋಟೆ ಕೊತ್ತಲೆಗಳು, ದೇವಾಲಯಗಳು, ಪ್ರಮುಖ ನಾಲ್ಕು ದ್ವಾರಗಳನ್ನು ನಿರ್ಮಾಣ ಮಾಡಿದ್ದಾರೆ.

ನಾಡಿನ ಭವಿಷ್ಯದ ದೂರದೃಷ್ಟಿ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಪ್ರಸ್ತುತ ಬೆಂಗಳೂರು ನಗರ ಜನಸಾಮಾನ್ಯರಿಗೆ ಬದುಕು ಕಟ್ಟಿಕೊಳ್ಳಲು ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಪ್ರಮುಖ ನಗರವಾಗಿದೆ ಎಂದರು.

ಒಂದು ಕಾಲದಲ್ಲಿ ಕಾಡಿನಿಂದ ಕೂಡಿದ್ದ ಪ್ರದೇಶಕ್ಕೆ ಕೋಟೆ ನಿರ್ಮಿಸಿ, ಅದನ್ನು ಬೆಂಗಳೂರು ನಗರವನ್ನಾಗಿಸಿ, ಅದರ ಅಭಿವೃದ್ಧಿಗೆ ಕಾರಣರಾದ ನಾಡಪ್ರಭು ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ ಎಂದರು.

ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ| ಶ್ರೀಕಾಂತ ಸಿದ್ಧಾಪುರ ಉಪನ್ಯಾಸ ನೀಡಿ, ಕೆಂಪೇಗೌಡ ಕೃಷಿಗೆ ಆದ್ಯತೆ ನೀಡುವ ಉದ್ದೇಶದಿಂದ ನಗರದಲ್ಲಿ ಹಲವಾರು ಕೆರೆಗಳನ್ನು ಸ್ಥಾಪಿಸಿದ್ದಾರೆ. ತನ್ನನ್ನು ಬೇಟೆಯಾಡಲು ಬಂದ ನಾಯಿಯನ್ನು ಮೊಲವೊಂದು ಧೈರ್ಯದಿಂದ ಅಟ್ಟಿಸಿಕೊಂಡು ಹೋಗುತ್ತಿರುವ ಪ್ರದೇಶದಲ್ಲಿ ಬೆಂಗಳೂರು ನಗರ ನಿರ್ಮಾಣ ಮಾಡಲು ಕೆಂಪೇಗೌಡ ನಿರ್ಧರಿಸಿದರು ಎಂದು ಇತಿಹಾಸ ತಿಳಿಸುತ್ತದೆ.

ನಾಲ್ಕೂ ದಿಕ್ಕಿನಲ್ಲೂ ಗಡಿ ರೇಖೆ ಗುರುತಿಸಲು ಎತ್ತುಗಳಿಗೆ ನೇಗಿಲನ್ನು ಕಟ್ಟಿ ಎತ್ತುಗಳು ನಿಲ್ಲುವ ಪ್ರದೇಶವನ್ನು ಗಡಿ ಪ್ರದೇಶ ಎಂದು ನಿರ್ಧರಿಸಿ, ಅದರ ಒಳಗೆ ಬೆಂಗಳೂರು ನಗರ ನಿರ್ಮಿಸಿದರು ಎಂಬ ದಂತಕಥೆಗಳೂ ಇವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಚುನಾವಣಾ ಶಾಖೆಯ ತಹಶೀಲ್ದಾರ್ ಪರಶುರಾಮ್, ಉಡುಪಿ ಜಿಲ್ಲಾ ಒಕ್ಕಲಿಗ ಸಮಾಜ ಅಧ್ಯಕ್ಷ ತುಕಾರಾಮ್, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳು, ಕ.ಸಾ.ಪ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಮೊದಲಾದವರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ರಾಮಾಂಜಿ ನಿರೂಪಿಸಿದರು. ಕ.ಸಾ.ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ವಂದಿಸಿದರು.

 
 
 
 
 
 
 
 
 
 
 

Leave a Reply