ಉಡುಪಿ: ಹೆರಿಗೆ ಸಂದರ್ಭ ಮಹಿಳೆಯೋರ್ವರು ಸಾವನ್ನಪ್ಪಿದ್ದು , ಇದರಿಂದ ಕುಪಿತಗೊಂಡ ಮೃತರ ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಉಡುಪಿಯ ಬಿ.ಆರ್ ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮುಂದೆ ಈ ಘಟನೆ ನಡೆದಿದೆ.
ಕೋಟೇಶ್ವರದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಷಾ ಸಾವನ್ನಪ್ಪಿರುವ ದುರ್ದೈವಿ. ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಉಷಾ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷದಿಂದಲೇ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಿಕರು ಆರೋಪ ಮಾಡಿ ಆಸ್ಪತ್ರೆ ಮುಂದೆ ಜಮಾಯಿಸಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಈ ವೇಳೆ ಪರಿಸ್ಥಿತಿ ಕೈಮೀರದಂತೆ ಮಧ್ಯಪ್ರವೇಶಿಸಿರುವ ಉಡುಪಿ ನಗರ ಠಾಣೆ ಪೊಲೀಸರು ಪ್ರತಿಭಟನಕಾರರನ್ನು ಸಮಾಧಾನಪಡಿಸಿದ್ದಾರೆ.ಸ್ಥಳಕ್ಕೆ ಜಿಲ್ಲಾ ಸರ್ಜನ್ ಮತ್ತು ಜಿಲ್ಲಾ ವೈದ್ಯಾಧಿಕಾರಿ ಭೇಟಿ ನೀಡಿದ್ದು, ಹೆರಿಗೆಯಾದ ಬಳಿಕ ಮಹಿಳೆಯಲ್ಲಿ ಮೂರ್ಛೆ ರೋಗ ಕಾಣಿಸಿಕೊಂಡಿದೆ.ಕೂಡಲೇ ನಾವು ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದೇವೆ.ಆದರೆ ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.