ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20ವರ್ಷ ಜೈಲುಶಿಕ್ಷೆ

ಉಡುಪಿ, ಜೂ.27: ಕುಂದಾಪುರ ತಾಲೂಕಿನಲ್ಲಿ ಮನೆಯೊಂದರಲ್ಲಿ ಕೆಲಸ ಮಾಡುತ್ತ ತಾಯಿಯೊಂದಿಗೆ ತೋಟದ ಮನೆಯಲ್ಲಿ ವಾಸವಾಗಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಹಾವೇರಿ ಮೂಲದ ಹನುಮಂತ(55) ಎಂಬಾತನಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಸೋಮವಾರ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ನೊಂದ ಬಾಲಕಿ ತನ್ನ ತಾಯಿ ಜೊತೆ ತೋಟದ ಮನೆಯಲ್ಲಿ ವಾಸ ಮಾಡಿಕೊಂಡಿದ್ದು, ಅದೇ ತೋಟದಲ್ಲಿ ಆರೋಪಿ ಕೆಲಸ ಮಾಡಿಕೊಂಡು ಬೇರೆ ಮನೆಯಲ್ಲಿ ವಾಸಿಸುತ್ತಿದ್ದನು. ಹನುಮಂತ 2021ರ ಜನವರಿ ತಿಂಗಳಲ್ಲಿ ಬಾಲಕಿ ಒಬ್ಬಳೇ ಮನೆಯಲ್ಲಿರುವಾಗ ಅತ್ಯಾಚಾರ ಎಸಗಿದ್ದನು. ಈ ಕುರಿತು ನೊಂದ ಬಾಲಕಿ ಮಾಹಿತಿ ನೀಡಿದ್ದು, ಬಳಿಕ ಆಕೆಯನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನೊಂದ ಬಾಲಕಿಯ ತಾಯಿ ಆರೋಪಿ ವಿರುದ್ಧ ನೀಡಿದ ದೂರಿನಂತೆ ಆಗಿನ ಕುಂದಾಪುರ ಠಾಣಾ ಎಸ್ಸೈ ಸದಾಶಿವ ಗವರೋಜಿ ಪ್ರಕರಣ ದಾಖಲಿಸಿಕೊಂಡು, ನಂತರ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಸಂಪೂರ್ಣ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ 18 ಸಾಕ್ಷಿಗಳ ಪೈಕಿ 12 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿ ಲಾಗಿದ್ದು, ವೈದ್ಯಕೀಯ ಸಾಕ್ಷಿ ಮತ್ತು ನೊಂದ ಬಾಲಕಿ ಹಾಗೂ ಇತರ ಸಾಕ್ಷಿಗಳು ಹೇಳಿದ ಸಾಕ್ಷಾಧಾರಗಳು ಅಭಿಯೋಜನೆಗೆ ಪರವಾಗಿದ್ದು, ಆರೋಪಿ ಹನುಮಂತನಿಗೆ ಅತ್ಯಾಚಾರ ಎಸಗಿದಕ್ಕಾಗಿ 20ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25ಸಾವಿರ ರೂ. ದಂಡ ಹಾಗೂ ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಎಸಗಿದಕ್ಕೆ 20ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷಗಳ ಸಾದಾ ಶಿಕ್ಷೆ ಮತ್ತು ಒಟ್ಟು ದಂಡದಲ್ಲಿ 40ಸಾವಿರ ರೂ. ಬಾಲಕಿಗೆ ಮತ್ತು 5000ರೂ. ಸರಕಾರಕ್ಕೆ ಪಾವತಿಸಬೇಕು ಮತ್ತು ನೊಂದ ಬಾಲಕಿಗೆ 5ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.
ಪ್ರಾಸಿಕ್ಯೂಷನ್ ಪರವಾಗಿ ಫೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು

 
 
 
 
 
 
 
 
 
 
 

Leave a Reply