ಯಡಿಯೂರಪ್ಪ ಮೊಮ್ಮಗಳು ಬಾರದ ಲೋಕಕ್ಕೆ ಪಯಣ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಡಿಯೂರಪ್ಪ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಬೆಂಗಳೂರಿನ ತಮ್ಮ ಅಪಾರ್ಟ್​ಮೆಂಟ್​​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆರಂಭದಲ್ಲಿ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕಾರ್ಯವನ್ನು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು. ಬೌರಿಂಗ್‌ ಆಸ್ಪತ್ರೆಯಲ್ಲಿ ಮರಣೋತ್ತರ ಕಾರ್ಯವನ್ನು ನಡೆಸಲಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಪತಿ ಡಾ.ನೀರಜ್‌ ಅವರು ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ತೆರಳಿದ್ದರು. ನಂತರದಲ್ಲಿ ಸೌಂದರ್ಯ ರೂಮ್‌ ಗೆ ತೆರಳಿ ಬಾಗಿಲು ಹಾಕಿಕೊಂಡಿದ್ದರು. ಮನೆ ಕೆಲಸದವರು ಬಾಗಿಲು ತೆರೆಯಲು ನೋಡಿದಾಗ ಸಾಧ್ಯವಾಗಿರಲಿಲ್ಲ. ಕೂಡಲೇ ಪತಿ ನೀರಜ್‌ ಅವರಿಗೆ ಸುದ್ದಿಯನ್ನು ಮುಟ್ಟಿಸಿದ್ದಾರೆ. ಕೂಡಲೇ ಮನೆಗೆ ಬಂದ ನೀರಜ್‌ ಅವರ ಸಮ್ಮುಖದಲ್ಲಿ ರೂಂನ ಬಾಗಿಲನ್ನು ಒಡೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್‌ ಮೂಲಕ ಚಿಕಿತ್ಸೆ ಕೊಡಿಸುವ ಕಾರ್ಯವನ್ನು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳಾಗಿದ್ದ ಡಾ.ಸೌಂದರ್ಯ ಕೂಡ ವೈದ್ಯೆಯಾಗಿದ್ದರು. 2018ರಲ್ಲಿ ಡಾ. ನೀರಜ್‌ ಅವರ ಜೊತೆಗೆ ವಿವಾಹವಾಗಿದ್ದು, ಅಪಾರ್ಟಮೆಂಟ್‌ವೊಂದರಲ್ಲಿ ವಾಸವಾಗಿದ್ದರು. 

ದಂಪತಿಗೆ ಒಂಬತ್ತು ತಿಂಗಳ ಮಗುವಿದೆ ಎನ್ನಲಾಗುತ್ತಿದೆ. ಆದರೆ ಘಟನೆಗೆ ಕಾರಣವೇನು ಅನ್ನೋದು ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಹೈಗ್ರೌಂಡ್ಸ್‌ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಮೊಮ್ಮಗಳ ಸಾವಿನ ಸುದ್ದಿ ತಿಳಿಯುತ್ತಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೌರಿಂಗ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅಲ್ಲದೇ ಸಿಎಂ ಬಸವರಾಜ್‌ ಬೊಮ್ಮಾಯಿ, ಸಚಿವ ಕಾರಜೋಳ ಭೇಟಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply