ಉಡುಪಿ, ಜೂನ್ 22 (ಕವಾ): ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ದಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಮ್ಯಾನ್ಯವಲ್ ಸ್ಕ್ಯಾವೆಂಜರ್ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿ, ಕಾಯಿದೆ ಹಾಗೂ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ , ಈ ವೃತ್ತಿಯಲ್ಲಿ ತೊಲಗಿಸಬೇಕು, ಒಂದೊಮ್ಮೆ ಕಾಯಿದೆಯನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ಕಾನೂನಿಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮ್ಯಾನ್ಯುವಲ್ ಸ್ಕ್ಯಾವೆಂಜರ್ ವೃತ್ತಿಯಿಂದ ಹೊರ ಬಂದಿರುವವರಿಗೆ ಸೂಕ್ತ ಪುರ್ನವಸತಿ ಒದಗಿಸಬೇಕು , ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಸಫಾಯಿ ಕರ್ಮಚಾರಿ ಅವರಿಗೆ ನಿವೇಶನ ಮಂಜೂರಾತಿಯನ್ನು ಪ್ರಥಮಾದ್ಯತೆಯ ಮೇಲೆ ನೀಡಬೇಕು ಎಂದು ಸೂಚಿಸಿದರು.
ಮ್ಯಾನ್ಯುವಲ್ ಸ್ಕ್ಯಾವೆಂಜರ್ ನಿಂದ ಮೃತಪಟ್ಟ ಕಾರ್ಮಿಕರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ಗುರುತಿನ ಚೀಟಿ ಹಾಗೂ ಪುರ್ನವಸತಿ ಕಲ್ಪಿಸುವ ಕಾರ್ಯವಾಗಬೇಕು ಎಂದರು.
ಸಕ್ಕಿಂಗ್ ಹಾಗೂ ಜಟ್ಟಿಂಗ್ ಯಂತ್ರ, ವೈಯಕ್ತಿಕವಾಗಿ , ಸಫಾಯಿ ಕರ್ಮಚಾರಿಗಳ ಸ್ವ ಸಹಾಯ ಗುಂಪುಗಳಿoದ , ಖಾಸಗಿ ಏಜೆನ್ಸಿ ಗುತ್ತಿಗೆದಾರರಿಂದ ಹೊಸ ಯಂತ್ರಗಳನ್ನು ಖರೀದಿ ಮಾಡಲು ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪೌರಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಸಾಮಾನ್ಯ ಅರೋಗ್ಯ ತಪಾಸಣೆ ಹಾಗೂ ವಾರ್ಷಿಕವಾಗಿ ಎರಡು ಬಾರಿ ಸಂಪೂರ್ಣ ದೇಹ ಪರೀಕ್ಷೆಯನ್ನು ಸ್ಥಳೀಯ ಸಂಸ್ಥೆಗಳು ಕಡ್ಡಾಯವಾಗಿ ಮಾಡಿಸಿ, ವರದಿಯನ್ನು ಜಿಲ್ಲಾ ಜಾಗೃತಿ ಸಮಿತಿಗೆ ನೀಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಲೋರ್ಸ್ ಹಾಗೂ ಕ್ಲೀನರ್ ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ವ್ಯಕ್ತಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು , ಜಾಗೃತ ಸಮಿತಿ ಸದಸ್ಯರುಗಳಾದ ವೈ.ಲಕ್ಷ್ಮಣ್ , ಗಣೇಶ್, ಅನಿತಾ, ಹಾಗೂ ಎಲ್ಲಾ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.