ಜಗ ಬದಲಿಸಿದ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಕಾಡ ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ‌ ನುಂಗಿತ್ತಾ… ಬಿದ್ದೀಯಬ್ಬೇ ಮುದುಕಿ ಬಿದ್ದೀಯಬ್ಬೇ… ಹಾಡುಗಳ ಮೂಲಕ ಮನೆಮಾತಾಗಿದ್ದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (ಜಿ. ಸುಬ್ರಹ್ನಣ್ಯಂ) ಇನ್ನಿಲ್ಲ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕರ್ನಾಟಕ ಸುಗಮ ಸಂಗೀತದ ಪ್ರಸಿದ್ದ ಗಾಯಕರಾಗಿದ್ದ, ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರಾಗಿದ್ದ ಶಿವಮೊಗ್ಗ ಸುಬ್ಬಣ್ಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಕೊನೆಯುಸಿರೆಳೆದರು. ಕಳೆದ ಕೆಲ ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದ ಅವರು ಜಯದೇವ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿದ್ದರು.

ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮಗನಾದ ಸುಬ್ಬಣ್ಣ ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938ರ ಡಿಸೆಂಬರ್ 14ರಂದು ಜನಿಸಿದ್ದರು.

ಮನೆಯಲ್ಲಿ ಪ್ರತಿದಿನ ಪೂಜೆ, ಪುರಸ್ಕಾರ, ವೇದ ಮಂತ್ರಗಳ ಝೇಂಕಾರ ಕೇಳಿ ಬೆಳೆದವರು ಶಿವಮೊಗ್ಗ ಸುಬ್ಬಣ್ಣ. ಇವರ ತಾತ ಶಾಮಣ್ಣನವರು ಸಂಗೀತದಲ್ಲಿ ಘನ ವಿದ್ವಾಂಸರು.
ಬಿ.ಎ, ಬಿ.ಕಾಂ ಮತ್ತು ಎಲ್‌ಎಲ್‌ಬಿ ಪದವೀಧರಾದ ಶಿವಮೊಗ್ಗ ಸುಬ್ಬಣ್ಣ ಅವರು 1982ರಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ಬಂದು ನೆಲೆಸಿದರು. 1979ರಲ್ಲಿ ‘ಕಾಡುಕುದುರೆ’ ಚಲನಚಿತ್ರದಲ್ಲಿ ಅವರು ಹಾಡಿದ ‘ಕಾಡು ಕುದುರೆ ಓಡಿ ಬಂದಿತ್ತಾ’ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರಪ್ರಶಸ್ತಿ ಪಡೆದು, ಆ ಮೂಲಕ ಈ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಎನಿಸಿಕೊಂಡರು.

ಜಿ. ಸುಬ್ರಹ್ಮಣ್ಯ ಉರುಫ್ ಶಿವಮೊಗ್ಗ ಸುಬ್ಬಣ್ಣರಿಗೆ ರಾಷ್ಟ್ರಪ್ರಶಸ್ತಿ ಲಭಿಸಿತ್ತು. ಗಾಯನಕ್ಕೆ ರಾಷ್ಟ್ರಪ್ರಶಸ್ತಿ ಪಡೆದ ಮೊದಲ ಕನ್ನಡಿಗರು‌ ಅವರು. ಅಂದಿನ ದಿನಗಳಲ್ಲಿ ವಕೀಲಿ ವೃತ್ತಿಯಲ್ಲಿ ಜಿ. ಸುಬ್ರಮಣ್ಯರಾಗಿ ಮತ್ತು ಗಾಯನದಲ್ಲಿ ಸುಬ್ಬಣ್ಣರಾಗಿ, ಹೀಗೆ ದ್ವಿಪಾತ್ರ ಅಭಿನಯ ಮಾಡುತ್ತಿದ್ದರು. ಕಡೆಗೆ ಅದು ಹುಟ್ಟಿಸುತ್ತಿದ್ದ ದ್ವಂದ್ವಗಳಿಂದ ಹೊರಬಂದು ನ್ಯಾಯಾಲಯದಲ್ಲಿ ಅಫಿಡೆವಿಟ್ ಸಲ್ಲಿಸಿ ಪೂರ್ಣ ಶಿವಮೊಗ್ಗ ಸುಬ್ಬಣ್ಣ ಆಗಿದ್ದರು.

ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ ಸುಬ್ಬಣ್ಣ ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ಸಂಗೀತದ ಕಡೆ ಮುಖ ಮಾಡದಿದ್ದರೂ, ರಕ್ತಗತವಾಗಿದ್ದ ಸಂಗೀತ ಆಗಾಗ ಇವರನ್ನು ಎಚ್ಚರಿಸಿ ಶಾಲಾ ಸಮಾರಂಭಗಳಲ್ಲಿ ಹಾಡುವಂತೆ ಪ್ರೇರೇಪಿಸುತ್ತಿತ್ತು.

ಇದರಿಂದಾಗಿ ಶಾಲಾ ದಿನಗಳಲ್ಲಿ ಹಲವಾರು ಪ್ರಶಸ್ತಿ ಪಡೆದು, ಹಾಡಿನ ಸುಬ್ಬಣ್ಣ ಎಂದೆನಿಸಿಕೊಂಡರು.

ಬಳಿಕ ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ 1963ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದರು. ಸಿನಿಮಾ ರಂಗಕ್ಕೆ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.

1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ಸಾಗಿದರು. ಆಕಾಶವಾಣಿ ಎಂ.ಎಸ್.ಐ.ಎಲ್. ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ‍್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮನೆ ಮಾತಾದರು.

ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ್ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದೆ. 1974ರಲ್ಲಿ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಸಂದ “ರಜತಕಮಲ್” ಪುರಸ್ಕಾರ ಪಡೆದ ಹೆಗ್ಗಳಿಕೆ ಇವರದಾಗಿದೆ.

 
 
 
 
 
 
 
 
 
 
 

Leave a Reply