ಹೆಣ್ಣು ಮಕ್ಕಳು ಜಾಗೃತರಾದಲ್ಲಿ ಶೋಷಣೆ ಕಡಿಮೆ : ನ್ಯಾ. ಶ್ರೀನಿವಾಸ ಸುವರ್ಣ

ಉಡುಪಿ: ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದರೂ ಸಹ ಇಂದಿಗೂ ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಲೇ ಇವೆ. ಹೆಣ್ಣು ಮಕ್ಕಳು ಜಾಗೃತರಾದಾಗ ಮಾತ್ರ ಅವರ ಮೇಲಿನ ಶೋಷಣೆಗಳು ಕಡಿಮೆಯಾಗಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದರು.
ಅವರು ಇಂದು ಬ್ರಹ್ಮಾವರದ ಬೋರ್ಡ್ ಹೈಸ್ಕೂಲ್‌ನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚೈಲ್ಡ್ ಲೈನ್-1098 ಮತ್ತು ರೋಟರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರ ಮತ್ತು ಕೋರ್ಟುಗಳು ಫೋಕ್ಸೋ ಕಾಯಿದೆಯ ಮೂಲಕ ದೌರ್ಜನ್ಯ ಎಸಗುವ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿದರೂ ಹೆತ್ತವರು, ಶಿಕ್ಷಕರು ಮತ್ತು ಸಮಾಜ ಜಾಗೃತರಾಗಿ ಸಂಬ0ಧಪಟ್ಟವರಿಗೆ ತಿಳಿಸಿ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ಕಡಿಮೆ ಮಾಡುವಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನಜಾಗೃತಿ ಮೂಡಿಸಿ, ಹೆಣ್ಣುಮಕ್ಕಳ ಮೇಲಿನ ಶೋಷಣೆ ಮತ್ತು ದೌರ್ಜನ್ಯ ವನ್ನು ತಡೆಗಟ್ಟುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಬೈಕ್ ರೈಡಿಂಗ್ ಸಾಹಸ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ಕು.ಅಪೂರ್ವ ಬೈಕಾಡಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶಿವಕುಮಾರಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ ನಾಯ್ಕ, ಬ್ರಹ್ಮಾವರ ಪೊಲೀಸ್ ಠಾಣೆಯ ಮುಕ್ತಾಬಾಯಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ರಾಮಕೃಷ್ಣ, ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ನಾರಾಯಣ ಬಿ.ಕೆ., ರೋ.ಚಂದ್ರಶೇಖರ ಅಡಿಗ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಚೈಲ್ಡ್ಲೈನ್ ನಿರ್ದೇಶಕ ರೊ.ರಾಮಚಂದ್ರ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ರೋಟರಿ ಅಧ್ಯಕ್ಷ ರೋ.ಸುಬ್ರಹ್ಮಣ್ಯ ಕಾರಂತ ಸ್ವಾಗತಿಸಿದರು. ಶಾಲಾ ಉಪಪ್ರಾಂಶುಪಾಲ ಬಿ. ಟಿ.ನಾಯ್ಕ್ ವಂದಿಸಿದರು.
 
 
 
 
 
 
 
 
 
 
 

Leave a Reply