ಸಮಾಜದಲ್ಲಿ ಅಶಕ್ತರಾದ ವಿಕಲಚೇತನರಿಗೆ ಸಹಕರಿಸಿ ಶಕ್ತಿ ತುಂಬಿಸುವ ಕೆಲಸವಾಗಬೇಕು: ಜಯಪ್ರಕಾಶ್ ಹೆಗ್ಡೆ 

ಸಮಾಜದಲ್ಲಿ ಶಕ್ತರಿಗೆ ಸಹಕರಿಸುವ ಬದಲು ಅಶಕ್ತರಾದ ವಿಕಲಚೇತನರಿಗೆ ಸಹಕರಿಸಿ ಅವರುಗಳಲ್ಲಿ ಶಕ್ತಿ ತುಂಬಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದರು.

ಅವರು ಇಂದು ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಂಗಣ (ಮಿನಿಹಾಲ್) ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ.), ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು, ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನಸಾಮಾನ್ಯರಿಗೆ ಅತ್ಯವಶ್ಯಕತೆಗಳಾದ ಶಿಕ್ಷಣ, ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸದನಗಳಲ್ಲಿ ಹೆಚ್ಚು ಚರ್ಚೆಯಾಗುವುದರೊಂದಿಗೆ ,ಉತ್ತಮ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದು ಜನೋಪಯೋಗಿ ಕಾರ್ಯಗಳನ್ನು ಮಾಡಬೇಕು ಎಂದರು.

ವಿಕಲಚೇತನರ ಅವಶ್ಯಕತೆಗಳ ಬೇಡಿಕೆಗಳು ಬಂದಾಗ ವಿಳಂಬವಿಲ್ಲದೆ ಅವರುಗಳ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಾಗ ಅರ್ಹತೆ ಹೊಂದಿರುವ ವಿಶೇಷ ಚೇತನರಿಗೆ ಆದ್ಯತೆಯ ಮೇಲೆ ಅವಕಾಶ ಕಲ್ಪಿಸಬೇಕು ಎಂದರು.

ವಿಶೇಷ ಚೇತನರಲ್ಲಿ ವಿಶಿಷ್ಟವಾದ ಕಾರ್ಯಕ್ಷಮತೆ ಹಾಗೂ ಶಕ್ತಿ ಇರುತ್ತದೆ. ಅವರು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಪೋಷಕರು ಸೇರಿದಂತೆ ಸಮಾಜದ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ವಿಶೇಷ ಚೇತನರ ಮೇಲೆ ಅನುಕಂಪ ಬೇಡ. ಅವರಿಗೆ ಅವಕಾಶ ಕಲ್ಪಿಸುವ ಜವಾಬ್ದಾರಿ ತಂದೆ ತಾಯಿಗಳು, ಸರ್ಕಾರ ಸೇರಿದಂತೆ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದರು.

ವಿಶೇಷ ಚೇತನರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸವನ್ನು ಮಾಡಿದಾಗ ಅವರುಗಳು ಮುಂದೆ ಬರಲು ಸಾಧ್ಯ. ಇತ್ತೀಚಿಗೆ ಜಿಲ್ಲೆಯ ವಿಕಲಚೇತನರ ಮೂಕ ಹುಡುಗ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಿದ್ದಾರೆ ಎಂದರು.

ವಿಶೇಷ ಚೇತನರು ಸದಾ ಕಾರ್ಯ ಚಟುವಟಿಕೆಯಿಂದ ಇರಲು ಪ್ರತಿಯೊಬ್ಬ ಪೋಷಕರು ತಾಳ್ಮೆಯಿಂದ ಸಹಕರಿಸಬೇಕು. ಅವರಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸವಾಗಬೇಕು ಎಂದ ಅವರು, ಜಿಲ್ಲೆಯ ಅನೇಕ ಸಂಘ ಸಂಸ್ಥೆಗಳು ವಿಶೇಷ ಚೇತನರಿಗೆ ಸೇವಾ ಮನೋಭಾವದಿಂದ ಉತ್ತಮ ಸೇವೆಯನ್ನು ಮಾಡುತ್ತಿರುವುದು ನಾನು ಕಂಡಿದ್ದೇನೆ ಅವರೆಲ್ಲರಿಗೂ ನನ್ನ ಅಭಿನಂದನೆಗಳು ಎಂದರು.

ಶಾಸಕ ಯಶ್ಪಾಲ್ .ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಲಚೇತನರ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಅವರಿಗೆ ಅರಿವು ಮೂಡಿಸಿದರ ಜೊತೆಗೆ ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸವಾಗಬೇಕು ಎಂದರು.

ವಿಕಲಚೇತನರಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಎಲ್ಲರ ಸಹಕಾರ ಅವಶ್ಯಕತೆಯಿದ್ದು, ಅದಕ್ಕೆ ಸ್ಪಂದಿಸುವಂತೆ ತಿಳಿಸಿದ ಅವರು, ಮುಂಬರುವ ಬಜೆಟ್ ನಲ್ಲಿ ವಿಕಲಚೇತನರಿಗೆ ಪ್ರತ್ಯೇಕ ಬಜೆಟ್ ಅನ್ನು ಮಂಡಿಸಲು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿದ ಕರಕುಶಲ ವಸ್ತು ಪ್ರದರ್ಶನ ಮತ್ತು ವಿಶೇಷ ಶಾಲಾ ಮಕ್ಕಳು ಹಾಗೂ ವಿಕಲಚೇತನರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 ವಿಕಲಚೇತನರಿಗೆ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

“ವಿಕಲಚೇತನರ ಪುನರ್ವಸತಿಗೆ ಇಲಾಖೆಯ ಯೋಜನೆಗಳ” ಕುರಿತು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ನಿರಂಜನ್ ಎಂ.ಭಟ್ ಮಾಹಿತಿ ನೀಡಿದರು.

   ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾಧ್, ಅಗ್ನೀಸ್ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ಯಾಮಲಾ ಸಿ. ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಜಯಶ್ರೀ ನಿರೂಪಿಸಿ, ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ ವಂದಿಸಿದರು.

  

 
 
 
 
 
 
 
 
 
 
 

Leave a Reply