ರಾಜ್ಯದ ಮೊದಲ ಸರಕಾರಿ ಖಾಸಗಿ ಸಹಭಾಗಿತ್ವದ ಕೆ.ಪಿ.ಎಸ್ ಶಾಲೆ ಅಭಿವೃದ್ಧಿಗೆ ಒಡಂಬಡಿಕೆ

ಉಡುಪಿ: ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡುವೆ
ರಾಜ್ಯದಲ್ಲೇ ಮೊದಲ ಬಾರಿಗೆ ಇಂದು ಒಡಂಬಡಿಕೆ ನಡೆಯಿತು.

ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ವತಿಯಿಂದ, ಈ ಒಡಂಬಡಿಕೆ ಮೂಲಕ ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ, ಬ್ರಹ್ಮಾವರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಜಾಗವನ್ನು ಒಂದುಗೂಡಿಸಿ, 2.47 ಕೋಟಿ ರೂ. ವೆಚ್ಚದಲ್ಲಿ ತರಗತಿ ಕೊಠಡಿಗಳ ಸಂಕೀರ್ಣ, ಪೂರ್ವ ಪ್ರಾಥಮಿಕ ವಿಭಾಗ ಆರಂಭಿಸಲು 10 ಲಕ್ಷ ರೂ. ಸೇರಿದಂತೆ ಒಟ್ಟು 2.57 ಕೋಟಿ ರೂ. ಗಳನ್ನು ನೀಡಲು ಒಪ್ಪಿಗೆ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್, ಬ್ರಹ್ಮಾವರದಲ್ಲಿ ಈ ಶಾಲೆಯ ಮೂಲಕ ಗ್ರಾಮೀಣ ಭಾಗದ
ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯಗಳೊಂದಿಗೆ ಅತ್ಯಂತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುವುದು. ಈ ಒಡಂಬಡಿಕೆಗೆ ಸರಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಅತ್ಯಂತ ಶೀಘ್ರದಲ್ಲಿ ದೊರಕಿಸಿ, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು.

ಹೆಗ್ಗುoಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಅಧ್ಯಕ್ಷ ಹೆಚ್.ಎಸ್.ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಜ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪಾಂಡುರoಗ ಕುಲಾಲ್, ರಾಮಕೃಷ್ಣ ಹಾರಾಡಿ, ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬ್ರಹ್ಮಾವರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 604, ಪ್ರೌಢಶಾಲೆಯಲ್ಲಿ 888 ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ 208 ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ.

 
 
 
 
 
 
 
 
 
 
 

Leave a Reply