ಜಿಲ್ಲೆಯ 1,111 ಬೂತ್ ಗಳಲ್ಲೂ ಜ.2 ರಿಂದ ಜ.12ರ ವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಣ್ಣ ಪುಟ್ಟ ವಿಚಾರಗಳನ್ನು ಬದಿಗಿಟ್ಟು ಬೂತ್ ವಿಜಯದ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಸನ್ನದ್ಧರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.
ಅವರು ಬಿಜೆಪಿ ವತಿಯಿಂದ ನಡೆಯುವ ‘ಬೂತ್ ವಿಜಯ ಅಭಿಯಾನ’ವನ್ನು ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಹಿರಿಯಡ್ಕ ಕೋಟ್ನಕಟ್ಟೆಯ ಹೋಟೆಲ್ ಸುರಭಿ ಸಭಾಂಗಣದಲ್ಲಿ ಜ.2ರಂದು ಉದ್ಘಾಟಿಸಿ ಮಾತನಾಡಿದರು.
ಬೂತ್ ಗೆಲ್ಲುವ ಮೂಲಕ ರಾಜ್ಯವನ್ನು ಗೆಲ್ಲುವ ಬಿಜೆಪಿ ರಾಷ್ಟ್ರೀಯ ನಿಕಟಪೂರ್ವ ಅಧ್ಯಕ್ಷ ಅಮಿತ್ ಶಾ ಕನಸು ಮತ್ತೆ ನನಸಾಗಬೇಕು. ಕಾಪು ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ ಕಾರ್ಯಗಳಾಗಿವೆ. ಈ ನಿಟ್ಟಿನಲ್ಲಿ ಪ್ರಚಾರದ ಅಗತ್ಯವಿದೆ. ಕಾಪು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು ಮುಂದುವರಿಸಲು ರೂಪುರೇಷೆ ರೂಪಿಸಬೇಕು ಎಂದರು.
ಪ್ರತಿ ಬೂತಿನಲ್ಲೂ ಫಲಾನುಭವಿಗಳ ಸಮಾವೇಶ, ಪ್ರತಿ ಮಂಡಲದಲ್ಲೂ ವಿವಿಧ ಮೋರ್ಚಾಗಳ ಸಮಾವೇಶ ನಡೆಸಬೇಕು. ಪ್ರತಿ ಬೂತಿನಲ್ಲೂ ಬೂತ್ ಸಮಿತಿಗಳ ಪರಿಶೀಲನೆ, ಪೇಜ್ ಪ್ರಮುಖರ ನಿಯುಕ್ತಿ, ಮತಗಟ್ಟೆಗಳ ವಾಟ್ಸಾಪ್ ಗ್ರೂಪ್ ರಚನೆ, ಕಾರ್ಯಕರ್ತರ ಮನೆಗಳ ಮೇಲೆ ಧ್ವಜಾರೋಹಣ, ಪ್ರಧಾನಿಯವರ ಮನ್ ಕೀ ಬಾತ್ ವೀಕ್ಷಣೆ ಮುಂತಾದ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿ ಬೂತ್ ಗೆಲುವಿನ ಮೂಲ ಮಂತ್ರದೊಂದಿಗೆ ಬದ್ಧತೆಯಿಂದ ಮುನ್ನಡೆಯಬೇಕು ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಸಂಘಟನಾತ್ಮಕ, ಅಲ್ಪಸಂಖ್ಯಾತರ ಪ್ರಾಬಲ್ಯವುಳ್ಳ ಕಾಪು ಕ್ಷೇತ್ರದಲ್ಲಿ ಎಸ್ಡಿಪಿಐ ರಾಜಕೀಯವಾಗಿ ಬೆಳವಣಿಗೆ ಕಾಣುತ್ತಿದ್ದು ಸಕಾರಾತ್ಮಕ ನೆಲೆಯಲ್ಲಿ ಬೂತ್ ಬಲವರ್ಧನೆಯಾಗಬೇಕು. 3,000 ಕೋಟಿ ರೂ. ಅಭಿವೃದ್ಧಿ ಕಾಮಗಾರಿ ಕ್ಷೇತ್ರದಲ್ಲಿ ಪ್ರಗತಿಯಲ್ಲಿದೆ. ಪುತ್ತೂರಿನಿಂದ ಹೊರಬಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಾಪು ಕ್ಷೇತ್ರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಹೆಜಮಾಡಿ ಟೋಲ್ ಸಮಸ್ಯೆ ಬಗೆಹರಿಸಲು ವಿಧಾನಸಭೆಯಲ್ಲಿ ಭರವಸೆ ದೊರೆತಿದೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಕಾರ್ಯಕರ್ತರು, ನಾಯಕರು ಮೈಮರೆತರೆ ಮುಂದಿನ ಐದು ವರ್ಷಗಳ ಕಾಲ ಹಿಂಸೆ ಅನುಭವಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು ಉಪಸ್ಥಿತರಿದ್ದರು.
ಭಾರತ ಮಾತೆಗೆ ಪುಷ್ಪ ನಮನ ಬಳಿಕ ಶ್ಯಾಮಲಾ ಕುಂದರ್ ವಂದೇ ಮಾತರಂ ಹಾಡಿದರು. ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಬೊಮ್ಮರಬೆಟ್ಟು ಬೂತ್ 2ರ ಅಧ್ಯಕ್ಷ ಶಿಶಿರ್ ಮನೆಯಲ್ಲಿ ಬಿಜೆಪಿ ಧ್ವಜವನ್ನು ಹಾರಿಸಲಾಯಿತು.