ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಟೂರ್ನಿಗೆ ಪೂರ್ಣಪ್ರಜ್ಞ ಕಾಲೇಜಿನ ಕ್ರೀಡಾಂಗಣದಲ್ಲಿ ಇಂದು ಚಾಲನೆ ನೀಡಲಾಯಿತು.
ದೇಶದ ನಾಲ್ಕು ವಲಯಗಳಿಂದ ಅಗ್ರಸ್ಥಾನ ಪಡೆದ ತಲಾ ನಾಲ್ಕು ತಂಡಗಳಂತೆ ಒಟ್ಟು 16 ತಂಡಗಳು ಭಾಗವಹಿಸುವ ಈ ಟೂರ್ನಿಯನ್ನು ಉಡುಪಿ ಶ್ರೀಅದಮಾರು ಮಠ ಶಿಕ್ಷಣ ಸಂಸ್ಥೆ ಬೆಂಗಳೂರು ಇದರ ಅಧ್ಯಕ್ಷರಾಗಿರುವ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮನುಷ್ಯನ ಮಾನಸಿಕ ಆರೋಗ್ಯಕ್ಕೆ ದೇಹ ಆರೋಗ್ಯಪೂರ್ಣವಾಗಿ ರಬೇಕು. ಇದಕ್ಕೆ ಕಬಡ್ಡಿಯಂಥ ಆಟೋಟ ಚಟುವಟಿಕೆ ಗಳು ಕಾರಣವಾಗಿ ರುತ್ತದೆ. ಪೂರ್ಣಪ್ರಜ್ಞ ಸಂಸ್ಥೆ ಇಂಥ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತದೆ ಎಂದು ಸ್ವಾಮೀಜಿ ನುಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿಯ ಉಪಕುಲಪತಿ ಪ್ರೊ. ಜಯರಾಜ್ ಅಮೀನ್ ಮಾತನಾಡಿ, ಕ್ರೀಡೆ ಎಂಬುದು ಜಾತಿ, ಮತ, ಧರ್ಮ, ನಂಬಿಕೆ ಸೇರಿದಂತೆ ಎಲ್ಲಾ ಚೌಕಟ್ಟುಗಳನ್ನು ಮೀರಿ ನಿಂತಿದೆ. ಅದರಲ್ಲೂ ಕಬಡ್ಡಿ ಆಕ್ರಮಣ ಹಾಗೂ ರಕ್ಷಣೆ ಎರಡನ್ನೂ ಸಮ್ಮಿಳಿತಗೊಂಡ ಕ್ರೀಡೆ. ಇದರಲ್ಲಿ ಚುರುಕಿನ ಕಣ್ಣು, ದೈಹಿಕ ಕ್ಷಮತೆ, ಕ್ಷಣದಲ್ಲೇ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬೇಕಾಗುತ್ತದೆ. ದೇಶದ ನಾಲ್ಕು ದಿಕ್ಕುಗಳಿಂದ ಬಂದಿರುವ ವಿದ್ಯಾರ್ಥಿ ಕ್ರೀಡಾಪಟು ಗಳು ಕ್ರೀಡಾಮನೋಭಾವದೊಂದಿಗೆ ಆಡುವಂತಾಗಲಿ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ಚಾಂಪಿಯನ್ಷಿಪ್ನ ಸಂಘಟನಾ ಕಾರ್ಯದರ್ಶಿ ಹಾಗೂ ಮಂಗಳೂರು ವಿವಿ ದೈಹಿ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಅವರು ಅತಿಥಿಗಳನ್ನು ಸ್ವಾಗತಿಸಿದರೆ, ಪ್ರಾಂಶುಪಾಲರಾದ ಡಾ.ರಾಮು ಎಲ್. ವಂದಿಸಿದರು. ಪ್ರಾಧ್ಯಾಪಕರಾದ ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.