ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಬೇಕು :ಶಾಸಕ ಕೆ. ರಘುಪತಿ ಭಟ್

ಉಡುಪಿ, ಜೂನ್ 18 (ಕವಾ): ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಸಾರ್ವಜನಿಕರ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು.

ಅವರು ಇಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮ ವ್ಯಾಪ್ತಿಯ ಪೇತ್ರಿ ಯುವಕ ಮಂಡಲ ವಠಾರದಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಳಿ ಬರುತ್ತಾರೆ. ಈ ಸಮಸ್ಯೆಗಳ ಪರಿಹಾರದ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕಾರ್ಯನಿರ್ವಹಿಸಿದರೆಸ ಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗಿಸಲು ಸಾಧ್ಯವಿದೆ. ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ದೊರೆತರೆ ಮಾತ್ರ ಸರಕಾರ ಮತ್ತು ಆಡಳಿತ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಬಹುದು ಎಂದರು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಸರ್ಕಾರವು ದೂರದ ಗ್ರಾಮೀಣ ಪ್ರದೇಶದ ಜನರ ಬಳಿ ತೆರಳಿ ಅವರ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸುವುದರಿಂದ ಜನರಿಗೆ ತುಂಬಾ ಉಪಯುಕ್ತವಾಗಿದೆ. ಜಿಲ್ಲಾಧಿಕಾರಿಗಳು ನೇರವಾಗಿ ಜನರನ್ನು ಭೇಟಿ ಮಾಡುವುದರಿಂದ ಅವರ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಿ, ಉಪಯುಕ್ತ ಮಾಹಿತಿ ನೀಡುವುದರಿಂದ ಜನರ ಸಮಸ್ಯೆಗಳನ್ನು ಬೇಗನೇ ಸರಿಪಡಿಸಬಹುದು ಎಂದರು.

ಪರಿಶಿಷ್ಟ ವರ್ಗದ ಜನರು ಅಧಿಕವಾಗಿರುವ ಚೇರ್ಕಾಡಿ ಗ್ರಾಮದಲ್ಲಿ, ಗ್ರಾಮಸ್ಥರಿಗೆ ಅಗತ್ಯ ದಾಖಲೆ ಪತ್ರಗಳನ್ನು ಪಡೆಯಲು ತೊಂದರೆಗಳಿದ್ದು, ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಬೇಕು. ರಸ್ತೆ ಕಾಮಗಾರಿಗೆ ಸಂಬoಧಿಸಿದoತೆ ಇರುವ ಗಡಿರೇಖೆಯ ನಿಯಮಗಳು ಅವೈಜ್ಞಾನಿಕವಾಗಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಈ ಬಗ್ಗೆ ಇರುವ ನಿಯಮಗಳ ಕುರಿತು ಅಧಿಕಾರಿಗಳು ಸಂಬoಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ನಿರ್ದೇಶನಗಳನ್ನು ಪಡೆದು ಸಾರ್ವಜನಿಕರಿಗೆ ತೊಂದರೆಯಾಗದoತೆ ಅನುಷ್ಠಾನಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸದರೆ ಸಾರ್ವಜನಿಕರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಹಾಗೂ ಒಳ್ಳೆಯ ಭಾವನೆ ಮೂಡಲಿದೆ. ಜನತೆಗೆ ಉತ್ತಮ ಸೇವೆ ಒದಗಿಸುವ ಬಗ್ಗೆ ಅಧಿಕಾರಿಗಳು ಸಂಕಲ್ಪ ಮಾಡಬೇಕು. ಚೇರ್ಕಾಡಿ ಭಾಗದಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಹಕ್ಕುಪತ್ರಗಳಲ್ಲಿನ ಬದಲಾವಣೆ, 11ಇ ನಕ್ಷೆ ತಿದ್ದುಪಡಿ ಹಾಗೂ ಪೌತಿ ಖಾತೆಗಳನ್ನು ಸರಿಪಡಿಸಲು, ಜನನ ಮರಣ ಪ್ರಮಾಣ ಪತ್ರ ವಿತರಿಸಲು ವಿಶೇಷ ಅಭಿಯಾನ ನಡೆಸಿ, ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದಿನ ಕಾರ್ಯಕ್ರಮದಲ್ಲಿಯೇ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದರು.

ಗ್ರಾಮದ ಸಮಸ್ಯೆಗಳ ಬಗ್ಗೆ ಮಾತನಾಡಿದ ಗ್ರಾ,ಪಂ.ಸದಸ್ಯ ಹರೀಶ್ ಶೆಟ್ಟಿ, ರಸ್ತೆ ನಿರ್ಮಾಣದ ನಿಯಮಗಳ ಸರಳೀರಣದ ಅಗತ್ಯತೆ ಬಗ್ಗೆ ಹೇಳಿದರು.

ಗ್ರಾ,.ಪಂ.ಸದಸ್ಯ ಕಮಲಾಕ್ಷ ಹೆಬ್ಬಾರ್ ಮಾತನಾಡಿ, ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿರುವ ಇಲ್ಲಿ, ಅವರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದರೂ ಹೆಚ್ಚಿನ ಗುರಿ ದೊರೆಯುತ್ತಿಲ್ಲ. ಇದರಿಂದ ಹಲವು ಮಂದಿ ಮನೆಯಿಲ್ಲದೆ ವಂಚಿತರಾಗಿದ್ದಾರೆ.

ಗ್ರಾಮದಲ್ಲಿ 600 ಕ್ಕೂ ಹೆಚ್ಚು ಹೈನುಗಾರರಿದ್ದು, ಇಲ್ಲಿನ ಪಶು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಪೂರ್ಣಕಾಲಿಕ ಪಶು ವೈದ್ಯರನ್ನು ನೇಮಿಸಬೇಕು ಮತ್ತು ಕಂದಾಯ ಸೇವೆಗಳನ್ನು ಸಮರ್ಪಕವಾಗಿ ನೀಡಲು ಪೂರ್ಣಕಾಲಿಕ ಗ್ರಾಮ ಲೆಕ್ಕಿಗರನ್ನು ನೇಮಿಸಬೇಕು ಎಂದರು.

ಈ ಬಗ್ಗೆ ಉತ್ತರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಜಿಲ್ಲೆಯ ಇತರೆ ಪಂಚಾಯತ್‌ನಲ್ಲಿರುವ ಹೆಚ್ಚುವರಿ ಮನೆ ನಿರ್ಮಾಣದ ಗುರಿಯನ್ನು ಒಂದು ವಾರದ ಒಳಗೆ ಈ ಪಂಚಾಯತ್‌ಗೆ ವರ್ಗಾಯಿಸುವ ಕುರಿತು ಆದೇಶ ಮಾಡಿ, ಮನೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುವುದು ಎನ್ನುವ ಮೂಲಕ ಹಲವು ವರ್ಷಗಳ ಪರಿಶಿಷ್ಟ ವರ್ಗದ ಜನರ ವಸತಿ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು.

ಹಾಲು ಕರೆಯುವ ಯಂತ್ರ, ಹಸು ಘಟಕ ನಿರ್ಮಾಣಕ್ಕೆ ಸಹಾಯಧನ, 26 ಮಂದಿಗೆ ಸಂಧ್ಯಾ ಸುರಕ್ಷಾ, 9 ಮಂದಿಗೆ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ವೇತನ, ಪಡಿತರ ಚೀಟಿ, ಮನೆ ಮಂಜೂರಾತಿ ಸೌಲಭ್ಯಗಳನ್ನು ಒದಗಿಸಲಾಯಿತು.

ಕಂದಾಯ ಇಲಾಖೆಗೆ ಸಂಬAಧಿಸಿದ 27, ಪಂಚಾಯತ್‌ಗೆ ಸಂಬoಧಿಸಿದ 15 ಅರ್ಜಿಗಳು ಸೇರಿದಂತೆ 55 ಕ್ಕೂ ಅಧಿಕ ಅರ್ಜಿಗಳ ವಿಚಾರಣೆ/ ವಿಲೇವಾರಿ ನಡೆಸಲಾಯಿತು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಗಳಿಸಿದ ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಆರೋಗ್ಯ ಇಲಾಖೆಯಿಂದ ಶಾಲಾ ಮಕ್ಕಳಿಗೆ ನಡೆಸಿದ ಮಾಹಿತಿ ಶಿಕ್ಷಣ ಸಂವಹನ ಸ್ಪರ್ಧೆಯ ಲಕ್ಕಿ ಡ್ರಾ ವಿಜೇತ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಲಾಯಿತು ಹಾಗೂ ಡೆಂಗ್ಯೂ, ಮಲೇರಿಯಾ ಕೋವಿಡ್ ಬಗ್ಗೆ ಅರಿವು ಮೂಡಿಸಲಾಯಿತು.

ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್, ಗ್ರಾಮ ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಕುಂದಾಪುರ ಡಿ.ಎಫ್.ಓ ಆಶೀಶ್ ರೆಡ್ಡಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಭೂ ದಾಖಲೆ ಇಲಾಖೆಯ ಉಪನಿರ್ದೇಶಕ ರವೀಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋವಿಂದ ಮಡಿವಾಳ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಂಕರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ಇಬ್ರಾಹಿಂ ಪೂರ್, ಆಹಾರ ಇಲಾಖೆ ಉಪನಿರ್ದೇಶಕ ಮೊಹಮದ್ ಇಸಾಕ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ ನಾಯಕ್ಹಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply