ನವಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು : ಸಚಿವ ಸುನೀಲ್ ಕುಮಾರ್

ಉಡುಪಿ: ವಿದ್ಯಾರ್ಥಿಗಳ ಮೂಲಕ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಕೆ ಶಿಕ್ಷಕರಿಗಿದ್ದು ದೇಶದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ನವಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.ಇಂದು ಉಡುಪಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇರ್ಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿಯ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ರೂಪಿಸಿದ್ದು, ಇದರಲ್ಲಿನ ಅಂಶಗಳ ಕುರಿತು ಶಿಕ್ಷಕರು ತಿಳಿದುಕೊಂಡು, ಅದನ್ನು ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸುವುದರಿಂದ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.ದೇಶದ ಸ್ವಾತ್ರಂತ್ರ್ಯದ ಅಮೃತ ಮಹೋತ್ಸವದ ಈ ಸಮಯದಲ್ಲಿ ಸ್ವಾತ್ರಂತ್ರ್ಯ ಪೂರ್ವದಲ್ಲಿನ ಹಲವು ಸಮಸ್ಯೆಗಳೊಂದಿಗೆ ಹಲವು ಹೊಸ ಸಮಸ್ಯೆಗಳು ಸೃಷ್ಠಿಯಾಗಿವೆ.ಇವುಗಳ ಪರಿಹಾರಕ್ಕೆ ಪ್ರಧಾನಮಂತ್ರಿಗಳ ನವಭಾರತ ನಿರ್ಮಾಣದ ಸಾಕಾರ ಶಾಲೆಗಳಿಂದಲೇ ಆರಂಭವಾಗಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವ ಮೂಲಕ ನವಭಾರತ ನಿರ್ಮಾಣಕ್ಕೆ ಬದ್ದರಾಗಬೇಕು ಎಂದರು.ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮುಖ್ಯವಾದುದು. ಕೋವಿಡ್ ಸಂಕಷ್ಟದಲ್ಲಿಯೂ ಸಹ ಜಿಲ್ಲೆಯ ಶಿಕ್ಷಕರು ಜಿಲ್ಲಾಡಳಿತ ಸೂಚಿಸಿರುವ ಹೆಚ್ಚುವರಿ ಕರ್ತವ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು ಅವರಿಗೆ ಅಭಿನಂದನೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಹಿಂದಿನ ಶಿಕ್ಷಕರು ಮತ್ತು ಈಗಿನ ಶಿಕ್ಷಕರು, ಶೈಕ್ಷಣಿಕ ಗುಣಮಟ್ಟವನ್ನು ಉಳಿಸಿ, ಬೆಳೆಸಿ, ಉತ್ತಮ ಸೇವೆ ಸಲ್ಲಿಸಿರುವ ಕಾರಣ ಜಿಲ್ಲೆಗೆ ರಾಜ್ಯದಲ್ಲಿ ಅತ್ಯುತ್ತಮ ಶೈಕ್ಷಣಿಕ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ ಎಂದರು.

“ಬಿಂಬ” ವಾರ್ಷಿಕ ಸಂಚಿಕೆ ಮತ್ತು ಶಿಕ್ಷಕರ ಗುರುತಿನ ಚೀಟಿಯನ್ನು ಸಚಿವ ವಿ.ಸುನೀಲ್ ಕುಮಾರ್ ಬಿಡುಗಡೆ ಮಾಡಿದರು. ಕಾಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ 17 ಮಂದಿ ಶಿಕ್ಷಕರು, 43 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪಸ್ಥಿತರಿದ್ದರು. ಡಿಡಿಪಿಐ ಎನ್.ಹೆಚ್. ನಾಗೂರ್ ಸ್ವಾಗತಿಸಿ, ಉಡುಪಿ ಬಿಇಓ ನಾಗೇಂದ್ರಪ್ಪ ವಂದಿಸಿದರು.

 
 
 
 
 
 
 
 
 
 
 

Leave a Reply