ಹಿರಿಯ ಯಕ್ಷಗಾನ ಅರ್ಥದಾರಿ ಸಿದ್ಧಕಟ್ಟೆ ಕೆ.ವಾಸು ಶೆಟ್ಟಿ ನಿಧನ

ಯಕ್ಷಗಾನದ ಹಿರಿಯ ಅರ್ಥಧಾರಿ, ಪ್ರಗತಿಪರ ಕೃಷಿಕ ಕುತ್ಲೋಡಿ ವಾಸು ಶೆಟ್ಟಿ (90) 26-07-2021 ರಂದು ಸಿದ್ಧಕಟ್ಟೆ ಸಮೀಪದ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಅವರು ಎಳವೆಯಿಂದಲೇ ಯಕ್ಷಗಾನದ ಅರ್ಥಗಾರಿಕೆಯಲ್ಲಿ ಪಳಗಿ ಪ್ರಸಿದ್ಧರ ಕೂಟಗಳಲ್ಲಿ ಭಾಗವಹಿಸಿ ಖ್ಯಾತರಾಗಿದ್ದರು. ಸ್ಥಳೀಯವಾಗಿ ಯಕ್ಷಗಾನ ಸಂಘಗಳನ್ನು ಸ್ಥಾಪಿಸಿ ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ವಿಫುಲವಾದ ಪುರಾಣ ಜ್ಞಾನ ಹಾಗೂ ಯಕ್ಷಗಾನ ಪ್ರಸಂಗಗಳ ಸಮಗ್ರ ಮಾಹಿತಿ ಹೊಂದಿದ್ದ ವಾಸು ಶೆಟ್ಟರು ಭೀಷ್ಮ, ಕರ್ಣ, ಕೌರವ, ವಾಲಿ, ಮಾಗಧ, ರಾಮ, ಕೃಷ್ಣ ಇತ್ಯಾದಿ ಪಾತ್ರಗಳಲ್ಲಿ ಪ್ರಭುತ್ವ ಸಾಧಿಸಿದ್ದರು.

ಇವರಿಗೆ ಪೊಳಲಿ ಶಾಸ್ತ್ರಿ ಪ್ರಶಸ್ತಿ, ಬಂಟ್ವಾಳ ಸಾಹಿತ್ಯ ಸಮ್ಮೇಳನ ಗೌರವ ಸಂದಿದೆ. ಉಡುಪಿಯ ಯಕ್ಷಗಾನ ಕಲಾರಂಗವು ಆರು ವರ್ಷದ ಹಿಂದೆ ಮಟ್ಟಿಮುರಳೀಧರ ರಾವ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರು ಮಕ್ಕಳು, ಕುಟುಂಬಿಕರು ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply