ಸಂಚಾರ ನಿಲ್ಲಿಸಿ ಪಂಚ ಭೂತಗಳಲ್ಲಿ ಲೀನನಾದ ‘ಸಂಚಾರಿ’ವಿಜಯ್

 ಚಿಕ್ಕಮಗಳೂರು: ತಮ್ಮ ಅದ್ಭುತ ನಟನೆಯ‌ ಮೂಲಕ‌ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಇನ್ನು ಕೇವಲ ನೆನಪು‌ ಮಾತ್ರ.ಬೈಕ್ ಅಪಘಾತದಲ್ಲಿ ಮೃತಪಟ್ಟ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ನಡೆಯಿತು.

ವಿಜಯ್ ಗೆಳೆಯ ರಘುರವರ ತೋಟದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನದಂತೆ ಮಂಗಳವಾರ ಅಂತ್ಯಸಂಸ್ಕಾರ ನಡೆದಿದೆ.ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ವಿಜಯ್ ಅಂತ್ಯಕ್ರಿಯೆ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರು, ಗ್ರಾಮದ ಜನ ಅಂತಿಮ ದರ್ಶನ ಪಡೆದರು.ಜೂ.12ರ ರಾತ್ರಿ ನಡೆದ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್(38) ತಮ್ಮ ವಿಭಿನ್ನ ಅಭಿನಯದ ಮೂಲಕ ಚಂದನವನ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು.‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ 28 ವರ್ಷಗಳ ಬಳಿಕ ರಾಷ್ಟ್ರಪ್ರಶಸ್ತಿಯನ್ನು ತಂದುಕೊಟ್ಟ ಕನ್ನಡದ ಹೆಮ್ಮೆಯ ನಟ ವಿಜಯ್.

ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಕಾರ್ಯದ ಬಳಿಕ ಮಂಗಳವಾರ ಬೆಳಗ್ಗೆ ವಿಜಯ್ ಮೃತದೇಹವನ್ನು ಅವರ ಬಂಧುಗಳಿಗೆ ಹಸ್ತಾಂತರಿಸಲಾಯಿತು. ನಂತರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು.ಬಳಿಕ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

 
 
 
 
 
 
 
 
 

Leave a Reply