ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಉತ್ತಮ ಸೇವೆ ನೀಡಿ: ಸುಮಿತ್ರಾ ನಾಯಕ್

ಉಡುಪಿ, ಏಪ್ರಿಲ್ 21 (ಕವಾ): ಸರ್ಕಾರಿ ನೌಕರರು ಸರಕಾರದ ಎಲ್ಲಾ ಸೇವೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಂತೆ
ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು.
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ
ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಹಾಗೂ 2021
ಮತ್ತು 22 ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭವ ಕಾರ್ಯಕ್ರಮವನ್ನು ಉದ್ಘಾಟಿಸಿ
ಮಾತನಾಡಿದರು.

ಸರ್ಕಾರಿ ಕೆಲಸ ದೇವರ ಕೆಲಸ ಅಲ್ಲ. ಅದು ಸಾರ್ವಜನಿಕರ ಕೆಲಸ. ಅದ್ದರಿಂದ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸರ್ಕಾರಿ ಸೇವೆಗಳನ್ನು
ತಲುಪಿಸಿದರೆ ನೌಕರರಿಗೆ ಸಾರ್ವಜನಿಕರ ಮೆಚ್ಚುಗೆ ದೊರೆಯುತ್ತದೆ. ಸರ್ಕಾರಿ ಸೇವೆಗಳನ್ನು ಅರಸಿ ಬರುವ ಜನತೆಗೆ ಸಕಾಲದಲ್ಲಿ ಸೇವೆಗಳನ್ನು
ಒದಗಿಸಿ, ಒಂದು ವೇಳೆ ನಿಮ್ಮಲ್ಲಿ ಆ ಸೇವೆ ಲಭ್ಯವಿಲ್ಲದಿದ್ದರೆ ಅವರಿಗೆ ಸೂಕ್ತ ಮಾಹಿತಿ ನೀಡಿ, ಅನ್ಯಥಾ ಅವರನ್ನು ಕಚೇರಿಗೆ ಅಲೆದಾಡಿಸಬೇಡಿ
ಎಂದ ಸುಮಿತ್ರ ನಾಯಕ್, ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಮಾಣಿಕ ಸರ್ಕಾರಿ ನೌಕರರು ಇದ್ದು, ಜಿಲ್ಲೆಯ ಅಭಿವೃದ್ಧಿಗೆ
ಶ್ರಮಿಸುತ್ತಿದ್ದಾರೆ. ನೌಕರರು ಮಾನಸಿಕ ಒತ್ತಡಗಳಿಗೆ ಒಳಗಾಗದೇ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಸರ್ಕಾರಿ ನೌಕರರು ನಾಗರೀಕ ಸೇವಾ
ಧ್ಯೇಯಗಳನ್ನು ರೂಢಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಉತ್ತಮ ಸೇವೆಯ ಮೂಲಕ ಸಾರ್ವಜನಿಕರ ಬದುಕಿನಲ್ಲಿ ಉತ್ತಮ ಬದಲಾವಣೆ
ತರಲು ಸಾಧ್ಯ. ಜಿಲ್ಲೆಯಲ್ಲಿ ವಿಕೋಪ ಸಂದರ್ಭದಲ್ಲಿ ನೌಕರರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದು, ಉಳಿದ ಸಮಯದಲ್ಲೂ ಸಹ ಇದೇ
ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯ ಸರ್ಕಾರಿ ನೌಕರರು ಉತ್ತಮವಾಗಿ ಕೆಲಸ
ನಿರ್ವಹಿಸುತ್ತಿರುವ ಕಾರಣ ಭೂಮಿ ಸೇವೆಯಲ್ಲಿ ರಾಜ್ಯದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಸಕಾಲ ಸೇವೆ ನೀಡುವಲ್ಲಿ ಸಹ ಉತ್ತಮ
ಸ್ಥಾನದಲ್ಲಿದೆ. ಎಲ್ಲಾ ಕಚೇರಿಗಳಲ್ಲಿ ಕಡತಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಮತ್ತು ಸಾರ್ವಜನಿಕರಿಂದ ಯಾವುದೇ ದೂರುಗಳು
ಬಾರದಂತೆ ಭ್ರಷ್ಠಾಚಾರ ರಹಿತವಾಗಿ, ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ
ಮಾಡುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ 2019-20 ಮತ್ತು 2020-21 ನೇ ಸಾಲಿನ ಸರ್ವೋತ್ತಮ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಶಿಶು ಅಭಿವೃದ್ಧಿ
ಯೋಜನಾಧಿಕಾರಿ ಶ್ವೇತಾ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು
ದಿನಕರ ಶೆಟ್ಟಿ, ಹೆಬ್ರಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಕಾಪು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ
ನಾಗೇಶ್ ಬಿಲ್ಲವ, ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ವೀಣಾ
ಸ್ವಾಗತಿಸಿದರು, ಜಿಲ್ಲಾ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ ವಂದಿಸಿದರು. ಉಪಾಧ್ಯಕ್ಷ ಪ್ರಶಾಂತ್ ಹಾವಂಜೆ
ನಿರೂಪಿಸಿದರು.

 
 
 
 
 
 
 
 
 
 
 

Leave a Reply