ಕನಿಷ್ಠ 30ಶೇಕಡಾ ಪಠ್ಯ ಕಡಿತ: ಸಚಿವ ಎಸ್‌.ಸುರೇಶ್ ಕುಮಾರ್

ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಕನಿಷ್ಠ ಶೇಕಡ 30ರಷ್ಟು ಪಠ್ಯ ಕಡಿತವಾಗಲಿದೆ. ಎಸ್ಸೆಸ್ಸೆಲ್ಸಿ ತರಗತಿಗಳಿಗೆ ಯಾವೆಲ್ಲ ಪಠ್ಯಗಳನ್ನು ಕಡಿತಗೊಳಿಸಬೇಕು ಎಂಬ ಬಗ್ಗೆ ತೀರ್ಮಾನಿಸಿದ್ದೇವೆ. ಯಾರೂ ಆತಂಕಪಡಬೇಕಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್ ಕುಮಾರ್ ಹೇಳಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ವಿವಿಧ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಕಡಿತಕ್ಕೆ ಸಂಬಂಧಿಸಿದ ಆದೇಶವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಂಗಳವಾರ ಸಂಜೆ ಅಥವಾ ಬುಧವಾರ ಹೊರಡಿಸಲಿದ್ದಾರೆ ಎಂದರು.
1ನೇ ತರಗತಿಯಿಂದ 9ನೇ ತರಗತಿವರೆಗೆ ಹಾಗೂ ಪ್ರಥಮ ಪಿಯುಸಿ ತರಗತಿಗಳನ್ನು ಆರಂಭಿಸುವ ಬಗ್ಗೆ ಜನವರಿ 15ರ ನಂತರ ರ್ಮಾನಿಸಲಾಗುವುದು . 8, 9 ಮತ್ತು ಪ್ರಥಮ ಪಿಯುಸಿ ಮಕ್ಕಳಿಗೆ ತರಗತಿಗಳನ್ನು ಆರಂಭಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಇದಕ್ಕಾಗಿ ಸಾಕಷ್ಟು ಕೊಠಡಿಗಳ ಲಭ್ಯತೆ ಇರಬೇಕು. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ತಜ್ಞರ ಸಮಿತಿಯ ಜೊತೆ ಚರ್ಚಿಸಲಾಗುವುದು. ಸಮಿತಿಯ ಅಭಿಪ್ರಾಯದ ಮೇಲೆ 15ರ ನಂತರ ತೀರ್ಮಾನಿಸಲಾಗುವುದು ಎಂದರು.
ನಾನು ರಾಜ್ಯದ ವಿವಿಧ ಕಡೆಗಳಲ್ಲಿ 160ರಿಂದ 170 ಶಾಲೆಗಳಿಗೆ ಭೇಟಿ ಕೊಟ್ಟು ಮಕ್ಕಳೊಂದಿಗೆ ಮಾತುಕತೆ ನಡೆಸಿದ್ದೇನೆ. ತರಗತಿಗಳನ್ನು ನಡೆಸುವ ಬಗ್ಗೆ, ಪರೀಕ್ಷೆಯ ಬಗ್ಗೆ ಅವರ ಅಭಿಪ್ರಾಯವನ್ನು ಕೇಳಿದ್ದೇನೆ. ವಿದ್ಯಾಗಮ ಕಾರ್ಯಕ್ರಮವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂಬ ಅನಿಸಿಕೆಯನ್ನು ಮಕ್ಕಳು ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್‌ ಕುಮಾರ್‌ ಅವರು ಹೇಳಿದರು.
 
 
 
 
 
 
 
 
 
 
 

Leave a Reply