ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾ.ಶಾಂತವೀರ ಶಿವಪ್ಪ

ಉಡುಪಿ, ಜೂ.12: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮತ್ತು ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ ಬೇಕಾಗಿರುತ್ತದೆ. ಆ ನಿಟ್ಟಿನಲ್ಲಿ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ತಿಳುವಳಿಕೆ ನೀಡುವುದು ಉತ್ತಮ ಕಾರ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದ್ದಾರೆ.

ಗ್ರಾಹಕರಲ್ಲಿ ಮತ್ತು ನಾಗರಿಕರಲ್ಲಿ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಆರಂಭಿಸಿರುವ ‘ಯು-ಆ್ಯಕ್ಟೃ್‘(ಉಡುಪಿ-ಅಡ್ವೊಕೆಸಿ ಆಫ್ ಕನ್‌ಸ್ಯೂಮರ್ಸ್‌ ಆ್ಯಂಡ್ ಸಿಟಿಜನ್ಸ್) ವೇದಿಕೆಯನ್ನು ರವಿವಾರ ನಗರದ ಆಶಾಚಂದ್ರ ಟ್ರೇಡ್ ಸೆಂಟರ್‌ನ ಉನ್ನತಿ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಮಾತನಾಡಿ, ಈಗ ಜನಸೇವೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದಕ್ಕೆ ನ್ಯಾಯಾಲಯವೂ ಹೊರತಲ್ಲ. ಕಾನೂನಿನ ಬಗ್ಗೆ ಮನೆಮನೆಗಳಿಗೆ ತೆರಳಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇಂತಹ ಕಾರ್ಯಗಳಲ್ಲಿ ನ್ಯಾಯವಾದಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಿದರೆ ಉತ್ತಮ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯನ್ನು ವೆಬ್‌ಸೈಟ್‌ನ್ನು ನ್ಯಾಯಾಧೀಶರು ಉದ್ಘಾಟಿಸಿ ದರು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬಿ. ಸೋಮನಾಥ ಹೆಗ್ಡೆ, ಹಿರಿಯ ನ್ಯಾಯವಾದಿ ಸಿ.ವಿಜಯ್ ಹೆಗ್ಡೆ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ನ್ಯಾಯವಾದಿ ಹಾಗೂ ಯು ಆ್ಯಕ್ಟ್ ಅಧ್ಯಕ್ಷ ಪ್ರೇಮ್ ಪ್ರಸಾದ್ ಶೆಟ್ಟಿ ಪ್ರಸ್ತಾವಿಕ ವಾಗಿ ಮಾತನಾಡಿದರು. ವಿಜಯ್ ಡಿಸೋಜ ಸ್ವಾಗತಿಸಿದರು. ಮಾಧವ ಕಾಮತ್ ವಂದಿಸಿದರು. ರಯಾನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply