ಡಾ.ವಿಜಯ ಸಂಕೇಶ್ವರ ಮುಡಿಗೆ ‘ಪದ್ಮಶ್ರೀ’

ನವದೆಹಲಿ: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ‘ಪದ್ಮಶ್ರೀ ಪ್ರಶಸ್ತಿ’ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಡಾ. ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ರಾಷ್ಟ್ರಪತಿಗಳು ಗೌರವಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಡಾ.ವಿಜಯ ಸಂಕೇಶ್ವರ ಅವರ ಪತ್ನಿ ಶ್ರೀಮತಿ ಲಲಿತಾ ಸಂಕೇಶ್ವರ ಉಪಸ್ಥಿತರಿದ್ದರು.

ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿರುವ ಡಾ. ವಿಜಯ ಸಂಕೇಶ್ವರ ಅವರು ವಿಆರ್​ಎಲ್ ಸಮೂಹ ಸಂಸ್ಥೆಗಳ ಮೂಲಕ ದೇಶದಲ್ಲೇ ದೊಡ್ಡ ಸರಕು ಸಾಗಾಣಿಕೆ ಉದ್ಯಮ ನಡೆಸುತ್ತಿದ್ದು, ಸಂಸ್ಥೆಯು ಸುಮಾರು 19 ಸಾವಿರ ಉದ್ಯೋಗಿಗಳನ್ನು ಹೊಂದಿದೆ.

ಸಾವಿರಾರು ಮಂದಿಗೆ ಪರೋಕ್ಷವಾಗಿ ಉದ್ಯೋಗ ಕಲ್ಪಿಸಿದೆ. ಸಾಮಾಜಿಕ ಸೇವೆಗಳ ಮೂಲಕವೂ ದೇಶವ್ಯಾಪಿ ಪ್ರಸಿದ್ಧಿ ಪಡೆದಿರುವ ಅವರು, ಕರ್ನಾಟಕದಿಂದ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು.

ಮಾಧ್ಯಮ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿರುವ ಸಂಕೇಶ್ವರರು ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಸುದ್ದಿ ವಾಹಿನಿ ನಡೆಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ವಿಆರ್​ಎಲ್ ಫಿಲಂ ಪ್ರೊಡಕ್ಷನ್​ನ ಮೊದಲ ಬಹುನಿರೀಕ್ಷಿತ ಚಿತ್ರ “ವಿಜಯಾನಂದ” ಬಯೋಪಿಕ್​ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ.
 
 
 
 
 
 
 
 
 
 
 

Leave a Reply