ಉಡುಪಿ : ಶ್ರೀ ಕೃಷ್ಣ ದರ್ಶನ ವ್ಯವಸ್ಥೆಯಲ್ಲಿ ಮತ್ತಷ್ಟು ಮಾರ್ಪಾಡು

ಉಡುಪಿ: ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣ ದರ್ಶನ ವ್ಯವಸ್ಥೆಯಲ್ಲಿ ಮತ್ತಷ್ಟು ಮಾರ್ಪಾಡು ಮಾಡಲಾಗಿದ್ದು, ಬುಧವಾರದಿಂದಲೇ ಹೊಸ ವ್ಯವಸ್ಥೆ ಜಾರಿಗೊಂಡಿದೆ ಎಂದು ಮಠದ ವ್ಯವಸ್ಥಾಪಕ ಗೋವಿಂದರಾಜ್ ತಿಳಿಸಿದ್ದಾರೆ.

ಭಕ್ತರ ಅನುಕೂಲಕ್ಕಾಗಿ ಬೆಳಿಗ್ಗೆ 6ರಿಂದ ಅಲಂಕಾರ ಪೂಜೆವರೆಗೆ ಹಾಗೂ ಅಲಂಕಾರ ಪೂಜೆ ಬಳಿಕ ಸಂಜೆ ಚಾಮರ ಸೇವೆಯ ವರೆಗೆ ಕೃಷ್ಣ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾತ್ರಿ ಚಾಮರ ಸೇವೆಯ ನಂತರ ರಾತ್ರಿ 9 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಕೃಷ್ಣ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ಕಿಂಡಿಯ ಮುಂಭಾಗದಲ್ಲಿ ಹೆಚ್ಚು ಹೊತ್ತು ನಿಲ್ಲದೆ,ಇತರ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಅವರು ವಿನಂತಿಸಿದ್ದಾರೆ. ಭಕ್ತಾದಿಗಳಿಗೆ ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದ ಭೋಜನದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ಗೋವಿಂದರಾಜ್ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply